ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ 11 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಎಲ್ಲರೂ ಗುಣಮುಖರಾಗಿದ್ದು, 8 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ್ ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾಗಿರುವ 8 ಸಿಬ್ಬಂದಿ ಪೈಕಿ ಇಬ್ಬರು ಹೋಂ ಕ್ವಾರಂಟೈನ್ ಅವಧಿಯನ್ನು ಸಹ ಮುಗಿಸಿದ್ದು, ಕರ್ತವ್ಯಕ್ಕೆ ಮರಳಲು ಕಾತುರರಾಗಿದ್ದಾರೆ. ಇನ್ನುಳಿದ ಆರು ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 2,170 ಸಿಬ್ಬಂದಿಗಳಿದ್ದಾರೆ. 55 ವರ್ಷ ಮೇಲ್ಪಟ್ಟವರಿಗೆ ಕರ್ತವ್ಯದಿಂದ ವಿನಾಯತಿ ನೀಡಲಾಗಿದೆ. ವಯಸ್ಸಿನ ಮಿತಿಯಿಲ್ಲದೆ ಹೃದಯ ರೋಗ, ಮಧುಮೇಹ, ಬಿಪಿ ಮತ್ತಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ ರಜೆ ನೀಡಲಾಗುತ್ತಿದೆ. ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುವ ಎಲ್ಲಾ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದ್ದು, ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರ, ಬಸ್ ಘಟಕಗಳು, ಬಸ್ಸುಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಿಮ್ಸ್ ಮತ್ತು ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿನ ವೈದ್ಯರು ಹಾಗೂ ನರ್ಸ್ ಗಳು ನಿರಂತರವಾಗಿ ಸೋಂಕಿತ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡುತ್ತಾ, ಯೋಗಕ್ಷೇಮ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಜೊತೆಗೆ ಪ್ರಾರಂಭದಿಂದಲೇ ಧೈರ್ಯ ಹೇಳಿ ಅವರಲ್ಲಿನ ಭಯ ನಿವಾರಿಸಿ ಆತ್ಮವಿಶ್ವಾಸ ತುಂಬಿದ್ದರಿಂದ ಎಲ್ಲರೂ ಶೀಘ್ರವಾಗಿ ಗುಣಮುಖರಾಗಲು ಕಾರಣವಾಗಿದೆ. ಸಕಾಲಿಕ ನೆರವು ನೀಡಿದ ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಹಾಗೂ ಕಿಮ್ಸ್ ನ ಹಿರಿಯ ಅಧಿಕಾರಿಗಳಿಗೆ ವಾಕರಸಾ ಸಂಸ್ಥೆಯ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ ಎಂದು ರಾಮನಗೌಡರ ತಿಳಿಸಿದ್ದಾರೆ.