ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸೋಮವಾರ ಆಯೋಜಿಸಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ರೆ ಕಾರ್ಯಕ್ರಮದ ಪರಿಶೀಲನೆ ನಡೆಸಿದ ಹುಬ್ಬಳ್ಳಿ ಕೇಂದ್ರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಾನವೇ ಇಲ್ಲ!
ಹೌದು, ಮಹಾನಗರ ಪಾಲಿಕೆ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಜೊತೆ ವೇದಿಕೆಯಲ್ಲಿ ಕುಳಿತುಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಶೆಟ್ಟರ್ಗೆ ಅವಕಾಶ ನೀಡಿಲ್ಲ. ವೇದಿಕೆಯಲ್ಲಿ ಒಂಭತ್ತು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಅದರಲ್ಲಿ ಮಾಜಿ ಸಿಎಂ ಶೆಟ್ಟರ್ ಅವರು ಸ್ಥಾನ ಪಡೆದಿಲ್ಲ.
ರಾಷ್ಟ್ರಪತಿ ಕಾರ್ಯಕ್ರಮದ ವೇದಿಕೆಯಲ್ಲಿ ಜಗದೀಶ್ ಶೆಟರ್ಗೆ ಇಲ್ಲ ಸ್ಥಾನ: ರಾಷ್ಟ್ರಪತಿ, ರಾಜ್ಯಪಾಲ, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವತ್ಥನಾರಾಯಣ, ಶಂಕರ್ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ, ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಮಾತ್ರ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ಇದು ಜಗದೀಶ್ ಶೆಟ್ಟರ್ ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ತಮ್ಮ ನಾಯಕನನ್ನು ಕೈಬಿಟ್ಟಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(ಓದಿ: ದಸರಾ ಉದ್ಘಾಟನಾ ವೇದಿಕೆಯಲ್ಲಿ 13 ಗಣ್ಯರಿಗೆ ಅವಕಾಶ, ಯುವ ದಸರಾಗೆ ಕಿಚ್ಚ ಸುದೀಪ್ ಅಲಭ್ಯ: ಸಚಿವ ಸೋಮಶೇಖರ್)
ಕಾರ್ಯಕ್ರಮ ನಡೆಯುತ್ತಿರೋದು ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಕ್ಷೇತ್ರದಲ್ಲಿ. ಆದ್ರೆ ಶೆಟ್ಟರ್ ಅವರಿಗೇ ಕಾರ್ಯಕ್ರಮದಲ್ಲಿ ಅವಕಾಶ ಕೊಡದೆ ಅವಮಾನ ಮಾಡಲಾಗಿದೆ ಎಂದು ಕಾರ್ಯಕರ್ತರು ಅಸಮಾ಼ಧಾನಗೊಂಡಿದ್ದಾರೆ.
ರಾಷ್ಟ್ರಪತಿಗಳ ಕಾರ್ಯಕ್ರಮದ ಸಿದ್ಧತೆಗೆ ಓಡಾಡುತ್ತಿರುವ ಜಗದೀಶ್ ಶೆಟ್ಟರ್ ಅವರನ್ನು ವೇದಿಕೆಯಿಂದ ದೂರವಿಡಲು ಕಾಣದ ಕೈಗಳ ಕೈವಾಡವಿದೆ ಎಂಬ ಮಾತುಗಳು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿವೆ.
(ಓದಿ: ರಾಷ್ಟ್ರಪತಿ ಆಗಮನದ ವೇಳೆ ಪಾಲಿಕೆ ಮಹಾ ಎಡವಟ್ಟು: ಕೆಲಸ ಮುಗಿದ ಮೇಲೆ ಕೊಟೇಶನ್)