ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಲೈಟ್ ಆಫ್ ಮಾಡಿ ದೀಪ ಹಚ್ಚಲು ಕರೆ ನೀಡಿದ್ದಾರೆ. ಅದನ್ನು ಎಲ್ಲರೂ ಸ್ವಯಂ ಪ್ರೇರಿತವಾಗಿ ಪಾಲನೆ ಮಾಡಿ ಒಗ್ಗಟ್ಟನ್ನು ಪ್ರದರ್ಶನ ಮಾಡಬೇಕೆಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಬಿಜೆಪಿ ಕಾರ್ಯಕರ್ತರು ನಗರದ ಬಡಜನರಿಗೆ ಅಗತ್ಯ ವಸ್ತುಗಳ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ 21 ದಿನಗಳ ಲಾಕ್ಡೌನ್ನ ಕಟ್ಟುನಿಟ್ಟಾಗಿ ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರು ಮನೆಯಲ್ಲಿಯೇ ಇರಬೇಕು. ಈಗಾಗಲೇ ಜನರ ಸಹಕಾರದಿಂದ ಲಾಕ್ಡೌನ್ ಯಶಸ್ವಿಯಾಗುತ್ತಿದೆ. ಬೇರೆ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಸಾವು-ನೋವು ತುಂಬಾ ಕಡಿಮೆ.
ಹಾಗಾಗಿ ಈಗಾಗಲೇ ಸ್ವಯಂ ಮತ್ತು ಶಿಸ್ತನ್ನು ಏ.14ರವರೆಗೆ ಕಾಪಾಡಿಕೊಂಡು ದೇಶದ ಒಳಿತಿಗಾಗಿ ಶ್ರಮಿಸಬೇಕು. ಇದರಿಂದ ದೇಶದ ಪ್ರತಿಯೊಬ್ಬರಿಗೂ ಒಳ್ಳೆಯದು ಆಗುವುದು ಎಂದರು. ನಾಳೆ ರಾತ್ರಿ 9 ಗಂಟೆಗೆ ಎಲ್ಲರೂ ನಿಮ್ಮ ಮನೆ ಮುಂದೆ 9 ನಿಮಿಷಗಳ ಕಾಲ ದೀಪ ಹಚ್ಚುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡಬೇಕು ಎಂದು ಮನವಿ ಮಾಡಿದರು.