ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಹಾನಗಲ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಇಲಾಖೆ ಇಲಾಖೆ ಕ್ರಮಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡ ಇಂತಹ ಕೃತ್ಯಕ್ಕೆ ಮುಂದಾಗಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಸರ್ಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಭರವಸೆ ನೀಡಿದರು.
ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ದೆಹಲಿ ಭೇಟಿಯಲ್ಲಿ ಲೋಕಸಭಾ ಚುನಾವಣೆ ಪೂರ್ವ ತಯಾರಿ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಕೂಡ ಮಾತುಕತೆ ನಡೆದಿದೆ. ಅಳೆದು ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎಂದು ಹೇಳಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ನೀಡಿದ್ದಾರೆ. ಐದು ಗ್ಯಾರಂಟಿ ಭರವಸೆಯನ್ನು ಆರು ತಿಂಗಳಲ್ಲಿ ಈಡೇರಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಬಿಜೆಪಿಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲುವು ಸಾಧಿಸಲಿದೆ ಎಂದರು.
ಧಾರವಾಡ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿ, ರಾಜ್ಯದ ಎಲ್ಲ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಈ ಕ್ಷೇತ್ರದ ಕುರಿತು ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳತ್ತಾರೆ. ಜಾತಿವಾರು, ಪ್ರಾಂತ್ಯ ಸೇರಿದಂತೆ ಪ್ರಸಿದ್ಧತೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದೀಗ ನಮಗೆ ಒಪ್ಪಿಸಿದ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಆ ನಿಲುವಿಗೆ ನಾನು ಬದ್ಧ. ಎಲ್ಲರಂತೆ ನಾನು ಕೂಡ ಶ್ರೀರಾಮನ ಭಕ್ತೆ. ಅದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಸಚಿವರು ತಮ್ಮ ಅಭಿಪ್ರಾಯ ತಿಳಿಸಿದರು.
ಶುಕ್ರವಾರ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವೂ ಕೂಡ ಶ್ರೀರಾಮನ ಭಕ್ತರು. ಆದರೆ, ಬಿಜೆಪಿಯವರು ಶ್ರೀರಾಮನ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಹಾಗಾಗಿ ನಾವು ಅದರ ವಿರುದ್ಧವೇ ಹೊರತು ಶ್ರೀರಾಮನ ವಿರೋಧಿಗಳಲ್ಲ. ನಾನು ಕೂಡ 22ರ ನಂತರ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಜ. 22 ರಂದು ಕರ್ನಾಟಕದ ಎಲ್ಲ ರಾಮಮಂದಿರಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಸಹ ಅವರು ಹೇಳಿದ್ದಾರೆ.
ಇದನ್ನೂ ಓದಿ: ಜ.22 ರಂದು ರಾಜ್ಯದ ರಾಮಮಂದಿರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ: ಸಿಎಂ