ಹುಬ್ಬಳ್ಳಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರದಲ್ಲಿ ಮಟ್ಟದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಕಲಿಕೆಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯಕ್ಕೆ ಭೇಟಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ. ಕಾನೂನು ವಿಶ್ವ ವಿದ್ಯಾಲಯದಲ್ಲಿ ಓದಿದವರು ದೇಶದ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಕೆಲಸ ನಿರ್ವಹಿಸಿ ಹೆಸರುಗಳಿಸಿದ್ದಾರೆ.

ಕಾನೂನು ವಿಶ್ವ ವಿದ್ಯಾಲಯದ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ವಿಶ್ವವಿದ್ಯಾಲಯ ಸುಧಾರಣೆ ಕುರಿತು ಸಿಂಡಿಕೇಟ್ ಸದಸ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹದು. ಇವುಗಳ ಕುರಿತು ಲಿಖಿತವಾಗಿ ಮನವಿ ಸಲ್ಲಿಸಿದರೆ ಅವುಗಳನ್ನು ಪರಮಾದ್ಯತೆ ಮೇರೆಗೆ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು.

ರಾಜ್ಯಪಾಲರ ಕನ್ನಡ ಕಲಿಕೆ ಪ್ರೀತಿ..
ಸಂವಾದದ ಆರಂಭದಲ್ಲಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾನು ಮಧ್ಯಪ್ರದೇಶದವನು, ಹಿಂದಿ ಭಾಷಿಕ. ಇಂಗ್ಲಿಷ್ನಲ್ಲಿ ಸಭೆ ಉದ್ದೇಶಿಸಿ ಮಾತನಾಡುವುದು ಕಡಿಮೆ. ಕರ್ನಾಟಕಕ್ಕೆ ಆಗಮಿಸಿದ ಮೇಲೆ ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದೇನೆ ಎಂದು ಕನ್ನಡ ಭಾಷೆಯ ಕುರಿತಾದ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ವಿಶ್ವ ವಿದ್ಯಾಲಯದ ಗ್ರಂಥಾಲಯ ಹಾಗೂ ಮುಖ್ಯ ಸಮುಚ್ಚಯ ಕಟ್ಟಡ, ಅಣುಕು ನ್ಯಾಯಲಯಗಳನ್ನು ವೀಕ್ಷಿಸಿದರು.