ಹುಬ್ಬಳ್ಳಿ: ತಾಲೂಕಿನ ಶೆರೆವಾಡ ಗ್ರಾಮದಲ್ಲಿರುವ ವಿಭವ ಇಂಡಸ್ಟ್ರೀಸ್ಗೆ ಸೇರಿದ ಗೋದಾಮಿನಲ್ಲಿ ಸೋಮವಾರ ಬೆಂಕಿ ತಗುಲಿ ಅಪಾರ ಪ್ರಮಾಣದ ಪಿನಾಯಿಲ್ ಹಾಗೂ ಮಂಕಿ ಪೊರಕೆಗಳು ಬೆಂಕಿಗೆ ಆಹುತಿಯಾಗಿದ್ದರ ಹಿನ್ನೆಲೆ ಕಾರ್ಖಾನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಶೆರೆವಾಡದಲ್ಲಿರುವ ಸಚಿವ ಪ್ರಹ್ಲಾದ್ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಬೆಂಕಿ ತಗುಲಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಬೆಂಕಿ ಅವಘಡದಿಂದ ಸಾಕಷ್ಟು ಪ್ರಮಾಣದ ಹಾನಿಯಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಹೆಸ್ಕಾಂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು. ಈ ಘಟನೆ ಕುರಿತು ಯಾರನ್ನೂ ದೂಷಿಸುವುದಿಲ್ಲ ಎಂದರು.
ಅನೇಕ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಂತಹ ಅವಘಡಗಳು ಮರಳಿ ಸಂಭವಿಸದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.