ಹುಬ್ಬಳ್ಳಿ: ಕೋವಿಡ್ 3ನೇ ಅಲೆಯು ತೀವ್ರಗತಿಯಲ್ಲಿ ಹರಡುತ್ತಿದೆ. ಜಿಲ್ಲೆಯಲ್ಲಿ ಕಳೆದ ವಾರ 269 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 76 ಜನರು ಗುಣಮುಖರಾಗಿದ್ದಾರೆ. 33 ಜನರನ್ನು ಹೋಮ್ ಐಸೋಲೇಷನ್ ಮಾಡಲಾಗಿದೆ. ಜ.8 ರಂದು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಕ್ರಮವಾಗಿ 162 & 42 ಪಾಸಿಟಿವ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 236 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕೋವಿಡ್ -19 ರ 3 ನೇ ಅಲೆಯ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಅವರು, ನಾಳೆಯಿಂದ ಪೊಲೀಸ್ ಇಲಾಖೆಯ ಸಿಎಆರ್ ಮೈದಾನದಲ್ಲಿ ಫ್ರಂಟ್ ಲೈನ್ ಕೆಲಸಗಾರರಿಗೆ ಬೂಸ್ಟರ್ ಡೋಸ್ ಲಸಿಕಾ ಕಾರ್ಯ ಆರಂಭವಾಗಲಿದೆ. ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳ ಜೊತೆ ಮಾತನಾಡಿ, ಶಾಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಕುರಿತು ಅರಿವು ಮೂಡಿಸುವಂತೆ ತಿಳಿಸಲಾಗುವುದು. ಈ ಹಿಂದೆ ತಾಲೂಕು ಮಟ್ಟದಲ್ಲಿ ಕೈಗೊಳ್ಳಲಾದ ಕೋವಿಡ್ ನಿಯಂತ್ರಣ ಚಿಕಿತ್ಸಾ ಕ್ರಮಗಳನ್ನು ಮುಂದುವರೆಸಲಾಗುವುದು. ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.
ಬೇರೆ ಜಿಲ್ಲೆಗಳಿಂದ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಕ್ಸಿಜನ್ ಹಾಗೂ ವೆಂಟಿಲೇಟರ್ಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ವಾರಾಂತ್ಯದ ಕರ್ಫ್ಯೂನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜಿಲ್ಲಾಡಳಿತ ಕ್ರಮವಹಿಸಿದೆ. ಕೋವಿಡ್ ನಿಯಂತ್ರಣದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದು ಸಚಿವರು ಹೇಳಿದರು.
ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, ಕೋವಿಡ್ 1& 2 ನೇ ಅಲೆಯಲ್ಲಿ ಅನುಭವಿಸಿದ ತೊಂದರೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಬೇರೆ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಅವುಗಳನ್ನು ಜಾರಿಗೊಳಿಸಬೇಕು. ಡೆಲ್ಟಾ ವೈರಸ್ಗಿಂತ ಓಮಿಕ್ರಾನ್ ವೈರಸ್ ಬಹಳ ಬೇಗನೆ ಹರಡುತ್ತದೆ. ಅಷ್ಟೇ ಬೇಗನೆ ಇಳಿಕೆಯಾಗುತ್ತದೆ ಎಂದರು.
ಲಾಕ್ ಡೌನ್ ಭಯದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಬೀದಿ ವ್ಯಾಪಾರಸ್ಥರು ಹಾಗೂ ಬಡ ಜನರಿಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. 104 ಸಹಾಯವಾಣಿ ಕೆಲಸಗಾರರಿಗೆ ಕೂಡಲೇ ಸಂಬಳ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು. ವಾರಾಂತ್ಯದ ಕರ್ಫ್ಯೂಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು. ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಾಹನಗಳಿಗೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.