ಧಾರವಾಡ: ತಾಲೂಕಿನ ಶಿಂಗನಹಳ್ಳಿ ಗ್ರಾಮದ ಯುವಕನೊಂದಿಗೆ ನಡೆಯಬೇಕಿದ್ದ ಬಾಲ್ಯ ವಿವಾಹದ ಬಗ್ಗೆ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 29ರ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೋಗುರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಧಾರವಾಡ ತಾಲೂಕಿನ ಶಿಂಗನಹಳ್ಳಿ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಈ ಬಗ್ಗೆ ಮಾಹಿತಿ ಕಲೆಹಾಕಿ ಕುಟುಂಬಸ್ಥರ ಮನೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಪೊಲೀಸ್ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಬಾಲ್ಯ ವಿವಾಹ ತಡೆದರು.
ಅಪ್ರಾಪ್ತ ಬಾಲಕ, ಬಾಲಕಿಯರ ಪೋಷಕರು ಹಾಗೂ ನೆರೆದ ಹಿರಿಯರಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಕುರಿತು ಜಾಗೃತಿ ಮೂಡಿಸಲಾಗಿದೆ. ಧಾರವಾಡ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಪಾಲಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.