ಹುಬ್ಬಳ್ಳಿ: ಈರುಳ್ಳಿ ದರ ದಿಢೀರ್ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಇಂದು ಮತ್ತೆ ನಗರದ ಎಪಿಎಂಸಿ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ನಗರದ ಎಪಿಎಂಸಿ ಎದುರಿಗೆ ಪ್ರತಿಭಟನೆ ನಡೆಸಿದ ರೈತರು, ಹುಬ್ಬಳ್ಳಿ-ಧಾರವಾಡ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಸಾಥ್ ನೀಡಿದರು. ರೈತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ನೆರೆ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸರ್ಕಾರ ಈರುಳ್ಳಿ ಬೆಳೆಗಾರರಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಕಳೆದ ದಿನಗಳಲ್ಲಿ ಕ್ವಿಂಟಾಲ್ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ 1,500 ರೂ.ಗೆ ಕುಸಿದಿರುವುದು ರೈತರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಮಳೆಯಿಂದ ಭಾರಿ ಪ್ರಮಾಣದ ಬೆಳೆ ನಾಶವಾಗಿದ್ದು, ಉಳಿದ ಬೆಳೆಗಳನ್ನು ಮಾರುಕಟ್ಟೆಗೆ ತಂದರೆ ದಲ್ಲಾಳಿಗಳು ದಿಢೀರ್ ಬೆಲೆ ಕಡಿಮೆ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಏಕಾಏಕಿ ರಸ್ತೆ ತಡೆ ನಡೆಸಿದ್ದರಿಂದ ಅರ್ಧ ಗಂಟೆಗೂ ಹೆಚ್ಚು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.