ಹುಬ್ಬಳ್ಳಿ: ಕೆಲಸದ ಭದ್ರತೆ, ವೇತನ ಹಾಗೂ ಹಲವಾರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘಟನೆಯ ವತಿಯಿಂದ ಹುಬ್ಬಳ್ಳಿ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಸುಮಾರು ಐದಾರು ತಿಂಗಳಿಂದ ಯಾವುದೇ ವೇತನವಿಲ್ಲದೇ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಅಲ್ಲದೆ ಸೇವಾ ಭದ್ರತೆಯಿಲ್ಲದೆ ದುಡಿಯುವಂತಾಗಿದ್ದು, ಕೂಡಲೇ ಸಚಿವರು ಹಾಗೂ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಜರುಗಿಸಿ ಅಕ್ಷರ ದಾಸೋಹ ಸಿಬ್ಬಂದಿಗಳ ಹಿತಾಸಕ್ತಿ ಕಾಪಾಡಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ 1,17,999 ಅಕ್ಷರ ದಾಸೋಹ ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಕ್ಷರ ದಾಸೋಹ ನೌಕರರಿಗೆ ವೇತನ ಹಾಗೂ ಕೆಲಸದ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.