ಧಾರವಾಡ: ಜಿಲ್ಲೆಯಾದ್ಯಂತ ಕರ್ನಾಟಕ ವಿಧಾನ ಪರಿಷತ್ತಿಗೆ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ -2020 ಹಿನ್ನೆಲೆಯಲ್ಲಿ ಮತದಾನ ಮತ್ತು ಮತಗಳ ಎಣಿಕೆ ನಡೆಯುವ ಸಮಯದಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಮತದಾನ ಪೂರ್ವ ಅಕ್ಟೋಬರ್ 26 ರಂದು ಸಾಯಂಕಾಲ 5 ಗಂಟೆಯಿಂದ ಅಕ್ಟೋಬರ್ 28 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತಗಳ ಎಣಿಕೆ ಹಿನ್ನೆಲೆಯಲ್ಲಿ ನವೆಂಬರ್ 1 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ, ಮದ್ಯ ಸಂಗ್ರಹಣೆಯನ್ನು, ಮದ್ಯದ ಅಂಗಡಿಗಳು, ಬಾರ್ಗಳು, ಕ್ಲಬ್ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು.
ಇದಕ್ಕೆ ಸಂಬಂಧಿಸಿದಂತೆ ಪರವಾನಿಗೆದಾರರು ಯಾವುದೇ ಪರಿಹಾರಕ್ಕೆ ಅರ್ಹರಾಗುವುದಿಲ್ಲ. ಇದಕ್ಕೆ ಸಂಬಂಧಿಸಿದ ಅಧಿಕಾರಿ ವರ್ಗ ಜಿಲ್ಲೆಯಾದ್ಯಂತ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆವಶ್ಯಕ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.