ಗದಗ: ಚುರ್ಚಿಹಾಳ ಗ್ರಾಮದ ಎಲ್ಲಾ ಸಮಸ್ಯೆಗಳ ಪರಿಹಾರದೊಂದಿಗೆ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹೇಳಿದರು.
ಮುಂಡರಗಿ ತಾಲೂಕಿನ ಚುರ್ಚಿಹಾಳ ಗ್ರಾಮದಲ್ಲಿ ಶನಿವಾರ ವಾಸ್ತವ್ಯ ಹೂಡಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾವುದು. ಜಿಲ್ಲೆಯ ಏಳು ತಾಲೂಕುಗಳಲ್ಲಿನ ಏಳು ಗ್ರಾಮಗಳನ್ನು ಗುರುತಿಸಿ, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ' ಕಾರ್ಯಕ್ರಮ ನಡೆಸಲಾಗುತ್ತಿದೆ.
ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಗ್ರಾಮದಲ್ಲಿನ ಪರಿಶಿಷ್ಟ ಜಾತಿಯರಿಗೆ ಮನೆಗಳನ್ನು ಒದಗಿಸಲು ಸ್ಥಳೀಯರು ಜಮೀನು ನೀಡಲು ಮುಂದಾದರೆ, ಅವರಿಂದ ಜಮೀನು ಖರೀದಿಸಿ ನಿವೇಶನ ರಹಿತರಿಗೆ ಸೂರು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ವಿಕಲಚೇತನ ಇಲಾಖೆಯಿಂದ 5 ಶ್ರವಣ ಸಾಧನ, 1 ಸೈಕಲ್, 2 ವ್ಹೀಲ್ ಚೇರ್, 5 ಯುಡಿಐಡಿ ಕಾರ್ಡ್ ಹಾಗೂ ವಿಕಲಚೇತನರನ್ನು ವಿವಾಹವಾದ ಇಬ್ಬರಿಗೆ ಪ್ರೋತ್ಸಾಹ ಧನವಾಗಿ 50 ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡಲಾಗುವ ಭಾಗ್ಯಲಕ್ಷ್ಮೀ ಬಾಂಡ್, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನದ ಒಟ್ಟು 16 ಫಲಾನುಭವಿಗಳಿಗೆ ಸ್ಥಳದಲ್ಲೇ ಮಂಜೂರಾತಿ ಆದೇಶ ಪ್ರತಿಯನ್ನು ವಿತರಿಸಲಾಯಿತು. ಇದರ ಜೊತೆಗೆ ಜಮೀನುಗಳ ಪಹಣಿ ತಿದ್ದುಪಡಿ ಪ್ರತಿಯನ್ನೂ ವಿತರಿಸಲಾಯಿತು.
ಓದಿ: ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ, ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಕೆ. ಸುಧಾಕರ್
ಮೃತ ರೈತನ ಕುಟುಂಬಕ್ಕೆ ಸಾಂತ್ವನ: ಕಾರ್ಯಕ್ರಮಕ್ಕೂ ಮುನ್ನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ವೀರಯ್ಯ ಸಂಗಯ್ಯ ಗದಗಿನಮಠ ಮನೆಗೆ ತೆರಳಿದ ಜಿಲ್ಲಾಧಿಕಾರಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಮೃತ ರೈತನ ಪತ್ನಿಗೆ ಸರ್ಕಾರದಿಂದ ನೀಡುವ ಪರಿಹಾರ ಹಾಗೂ ಆತನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಿದರು.
ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ: ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲಿಸಿದ ಜಿಲ್ಲಾಧಿಕಾರಿ, ಅಲ್ಲಿನ ಅವ್ಯವಸ್ಥೆ ಕಂಡು ಕೂಡಲೇ ದುರಸ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.