ಗದಗ: ಪ್ರವಾಹದ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಜಿಲ್ಲೆಯ ಡಿಎಚ್ಓ (ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ಅಧಿಕಾರಿ) ವಿರೂಪಾಕ್ಷರೆಡ್ಡಿ ಮಾದಿನೂರ ಅವರನ್ನು ಅಮಾನತು ಮಾಡಲಾಗಿದೆ.
ಜಿಲ್ಲೆಯ ರೋಣ, ನರಗುಂದ ಪ್ರವಾಹ ಸಂದರ್ಭದಲ್ಲಿ ವಿರೂಪಾಕ್ಷರೆಡ್ಡಿ ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿಸಿದ್ದರು. ಮತ್ತು ಪ್ರವಾಹ ಪೀಡಿತ ಪ್ರದೇಶಗಳತ್ತ ಸುಳಿದಿರಲಿಲ್ಲ. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಶಿವಶಂಕರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕೆಡಿಪಿ ಸಭೆಯಲ್ಲಿ ಮತ್ತು ಸರಿಯಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಡಿಎಚ್ಓ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಚಿವರು ನೀಡಿದ ವರದಿ ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ.