ಗದಗ: ಪಿಡಬ್ಲ್ಯೂಡಿ ಇಲಾಖೆ ಆವರಣದಲ್ಲಿ ಸಿಬ್ಬಂದಿಯೊಬ್ಬ ಮರ ಕಡಿಯುವಾಗ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮರದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಸವರಾಜನನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮರದ ಮೇಲಿಂದ ಬಸವರಾಜ ಕೆಳಗೆ ಬಿದ್ದ ಬಳಿಕ ಸಕಾಲಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ ಎಂದು ಆರೋಪಿಸಲಾಗಿದೆ. ಬಳಿಕ ಖಾಸಗಿ ವಾಹನದಲ್ಲಿ ನಗರದಲ್ಲಿ ಸುತ್ತಾಡಿದರೂ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲಿಲ್ಲ. ಕೊನೆಗೆ ಜಿಮ್ಸ್ ಆಸ್ಪತ್ರೆಯಲ್ಲೂ ಸಹ ದಾಖಲು ಮಾಡಿಕೊಂಡಿಲ್ಲ. ನಂತರ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದ್ರೆ ತೀವ್ರ ರಕ್ತಸ್ರಾವದಿಂದ ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆದ್ರೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ ಮೃತನ ಕುಟುಂಬಸ್ಥರು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ತಕ್ಷಣ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಕ್ಕಿದ್ರೆ ಬದುಕುತ್ತಿದ್ದ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.