ಹಾಸನ: ಕೇಂದ್ರ ಸರ್ಕಾರದ ವೈಫಲ್ಯ ಮತ್ತು ‘ಜನ ವಿರೋಧಿ ನೀತಿ’ಗಳ ವಿರುದ್ಧ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕೊರೊನಾ ದಾಳಿ ತಡೆಯುವಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗೆ ವಿಶ್ವ ಮಾನ್ಯತೆ ದೊರೆತಿದೆ ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ದೇಶದಲ್ಲಿ ಕಾಣಿಸಿಕೊಂಡ 3 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳ ಪೈಕಿ 12 ಸಾವಿರ ಮಂದಿ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವುದು ಮೋದಿ ಸರ್ಕಾರದ ಸಾಧನೆಯೇ? ಎಂದು ಪಕ್ಷದ ಕಾರ್ಯಕರ್ತರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳು:
- ಕೊರೊನಾ ಸಂಕಷ್ಟ ಕಾಲದಲ್ಲಿ ಆದಾಯ ತೆರಿಗೆ ಮಿತಿಯಿಂದ ಹೊರಗಿರುವ ಕುಟುಂಬಗಳಿಗೆ ತಿಂಗಳಿಗೆ ₹ 7,500 ರಂತೆ ಆರು ತಿಂಗಳವರೆಗೆ ನಗದು ವರ್ಗಾವಣೆ ಮಾಡಬೇಕು.
- ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ.ಯಂತೆ 6 ತಿಂಗಳವರೆಗೆ ಉಚಿತ ದಿನಸಿ ವಿತರಿಸಬೇಕು.
- ಉದ್ಯೋಗ ಖಾತ್ರಿ ಅಡಿಯಲ್ಲಿ ಕನಿಷ್ಠ ವರ್ಷದಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ನಗರದ ಬಡವರಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು.
- ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು. ರಾಷ್ಟ್ರೀಯ ಆಸ್ತಿಗಳ ಲೂಟಿಯನ್ನು, ಸಾರ್ವಜನಿಕ ವಲಯದ ಖಾಸಗೀಕರಣವನ್ನು ಮತ್ತು ಕಾರ್ಮಿಕ ಕಾನೂನುಗಳ ರದ್ಧತಿಯನ್ನು ನಿಲ್ಲಿಸಬೇಕು.
- ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಸ್, ಅಗತ್ಯ ಔಷಧಿಗಳ ಕೊರತೆ ನೀಗಿಸಬೇಕು.