ಹಾಸನ: ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ರಾಗಿ ಚೀಲಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ಕಬ್ಬಳಿ ಗ್ರಾಮದ ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ಶಿವಕುಮಾರ ತೋಟದ ಮನೆಯಲ್ಲಿ ಅಕ್ರಮವಾಗಿ ಪಡಿತರ ರಾಗಿ ದಾಸ್ತಾನು ಮಾಡಿಕೊಂಡಿದ್ದ ಎನ್ನಲಅಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್, ಶಿವಕುಮಾರ ಮನೆಯಲ್ಲಿದ್ದ ಸುಮಾರು 68 ಚೀಲಗಳನ್ನು ವಶಪಡಿಸಿಕೊಂಡು ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಆದೇಶ ನೀಡಿದ್ದಾರೆ.
ಇನ್ನು ಸಹಕಾರಿ ಸಂಘದ ಕಾರ್ಯದರ್ಶಿ ಅವ್ಯವಹಾರದಲ್ಲಿ ತೊಡಗಿದ್ದಾರೆ. ಕಾಳಸಂತೆಯಲ್ಲಿ ಪಡಿತರ ಧಾನ್ಯಗಳನ್ನು ಮಾರಾಟ ಮಾಡುವುದಷ್ಟೇ ಅಲ್ಲದೆ ಇತರ ಜಿಲ್ಲೆಗಳಿಗೂ ಅಕ್ರಮವಾಗಿ ಸರ್ಕಾರಿ ಪಡಿತರ ಧಾನ್ಯಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿದ ತಹಶೀಲ್ದಾರ್, ಎಲ್ಲ ರಾಗಿ ಚೀಲಗಳನ್ನು ವಶಪಡಿಸಿಕೊಂಡು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.