ಅರಕಲಗೂಡು : ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ಅಂಬೇಡ್ಕರ್ ಭವನ ಕೆಲಸವನ್ನು ಶಾಸಕರು ಶೀಘ್ರವೇ ಅನುದಾನ ಬಿಡುಗಡೆಗೊಳಿಸಿ ಪೂರ್ಣಗೊಳಿಸಬೇಕು. ನಿರ್ಲಕ್ಷಿಸಿದರೆ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಅಂಬೇಡ್ಕರ್ ಭವನ ಸ್ಥಾಪನೆಗೆ 5 ಕೋಟಿ ರೂ. ಮಂಜೂರು ಮಾಡಿ 1.50 ಕೋಟಿ ಹಣ ಬಿಡುಗಡೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಜನರ ವಿರೋಧ ಲೆಕ್ಕಿಸದೆ ಹಳೆಯ ಭವನ ಕೆಡವಿ ಹೊಸದಾಗಿ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಆಗ ಹಳೆಯ ಭವನ ತೆರವುಗೊಳಿಸದಂತೆ ಪ್ರತಿಭಟನೆ ನಡೆಸಿದ ಕೆಲವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಲಾಯಿತು. ಆದರೆ ಕಾಮಗಾರಿ ಮಾತ್ರ ಈವರೆಗೂ ಮುಗಿಯದೆ ಅರ್ಧಕ್ಕೆ ನಿಂತಿದೆ ಎಂದರು.
ತಾಲೂಕು ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಗಣೇಶ್ ವೇಲಾಪುರಿ ಮಾತನಾಡಿ, ಅಂಬೇಡ್ಕರ್ ಭವನ ಕಾಮಗಾರಿ ನಿಲ್ಲುವಲ್ಲಿ ಕಾಣದ ಕೈಗಳ ಕೈವಾಡವಿದೆ, ಆರಂಭದಲ್ಲೇ ಕಾಮಗಾರಿ ಪೂರ್ಣಗೊಳಿಸಿದ್ದರೆ ಬಡ ಜನರು ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುತ್ತಿತ್ತು ಎಂದರು.