ಹಾಸನ: ಆನ್ಲೈನ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಪೋಷಕರು ಮಕ್ಕಳ ಬಗ್ಗೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ ಸಂಬಂಧ ಐವರನ್ನು ಬಂಧಿಸಲಾಗಿದೆ. ಇವರಲ್ಲಿ ಆಕಾಶ್ ಎನ್ನುವ ಬುಕ್ಕಿಯಿಂದ ಹೆಚ್ಚಿನ ಮಾಹಿತಿ ಪಡೆಯಲಾಗಿದೆ. ಬೆಂಗಳೂರಿನಲ್ಲಿ ಈ ಜಾಲ ಇರುವ ಬಗ್ಗೆ ಮಾಹಿತಿ ದೊರಕಿದೆ. ಈ ಸಂಬಂಧ ಪೊಲೀಸರ ತಂಡ ರಚಿಸಿ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.
ಮನೆಯಲ್ಲಿರುವ ಮಕ್ಕಳ ಬಗ್ಗೆ ಪೋಷಕರು ನಿಗಾವಹಿಸಬೇಕು. ಇಂತಹ ಚಟಕ್ಕೆ ಮಕ್ಕಳು ಬಿದ್ದಿದ್ದರೆ ನಮಗೆ ಕೂಡಲೇ ಮಾಹಿತಿ ನೀಡಬೇಕು. ಬೆಟ್ಟಿಂಗ್ನಿಂದ ಮನೆ ಮಠ ಮಾರಿಕೊಂಡು ಬೀದಿ ಪಾಲಾಗಿದ್ದಾರೆ ಎಂದು ಎಚ್ಚರಿಸಿದರು.