ಹಾಸನ: ಜಿಲ್ಲೆಯ ಮೂರು ಜೀವನದಿಗಳಾದ ಹೇಮಾವತಿ ಯಗಚಿ ಹಾಗೂ ವಾಟೆಹೊಳೆ ಜಲಾಶಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಮೂರು ಜಲಾಶಯಗಳ ಕ್ರಸ್ಟ್ ಗೇಟ್ಗಳ ಮೂಲಕ ನೀರು ಬಿಡಲಾಗುತ್ತಿದೆ.
ಹೇಮಾವತಿ ಜಲಾಶಯಕ್ಕೆ ಶುಕ್ರವಾರ ಸಂಜೆ ವೇಳೆಗೆ 1,10,000 ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದೇ ರೀತಿ ನೀರು ಹರಿದುಬಂದಿದ್ದೇ ಆದಲ್ಲಿ ಇನ್ನೊಂದು ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೂರು ಜಲಾಶಯಗಳಿಂದ ನೀರು ಹರಿಬಿಡಲಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭಾರಿ ಮಳೆಯನ್ನು ಲೆಕ್ಕಿಸದೇ ಆಗಮಿಸಿ ಮೈದುಂಬಿ ಹರಿಯುತ್ತಿರುವ ಮನಮೋಹಕ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಆಗಸ್ಟ್ 10ರ ಶನಿವಾರ ಸಹ ಅರಸೀಕೆರೆ ಹಾಗೂ ಚನ್ನರಾಯಪಟ್ಟಣವನ್ನು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಅಂಗನವಾಡಿ, ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.