ಹಾಸನ: ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ನಿಯಂತ್ರಣಕ್ಕೆ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೋವಿಡ್ ಪರೀಕ್ಷೆಗಳ ನಿಗದಿತ ಗುರಿ ಸಾಧಿಸಲು ಸೋಂಕಿತರ ಕುಟುಂಬದ, ಐಎಲ್ಐ ಹಾಗೂ ಬಸ್ ನಿರ್ವಾಹಕರುಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದರು.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ಮೃತಪಟ್ಟವರ ಬಗ್ಗೆ ನಿತ್ಯ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಲವು ಜಿಲ್ಲೆಗಳಲ್ಲಿ ನಿಗದಿತ ಗುರಿಗಿಂತ ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿದ್ದು, ಅದೇ ರೀತಿ, ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳಲ್ಲೂ ಶೇ. 100 ರಷ್ಟು ಗುರಿ ಸಾಧಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದೆ ಹಾಗಾಗಿ, ಸರ್ಕಾರದ ನಿರ್ದೇಶನದಂತೆ ನಿಯಮ ಉಲ್ಲಂಘಿಸಿದವರ ವಿರುದ್ಧ ಹೆಚ್ಚಿನ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಬಗ್ಗೆ ಮಾಹಿತಿ ನೀಡಲು ತಡಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ದಂಡ ವಿಧಿಸುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ ಅವರು, ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ, ಔಷಧಗಳು, ಸಲಕರಣೆಗಳು ಹಾಗೂ ಹಣದ ಕೊರತೆ ಇದ್ದರೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸಂಪೂರ್ಣ ಮಾಹಿತಿ ನೀಡಿದರು.