ಹಾವೇರಿ: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಂತೆ ಹಾವೇರಿ ಜಿಲ್ಲೆಯ ಜನರು ಹಲವು ಅಭಿವೃದ್ಧಿಯ ಕನಸು ಕಂಡಿದ್ದರು. ಅದರಲ್ಲೂ ಹಿರೇಕೆರೂರು ಶಾಸಕ ಬಿ ಸಿ ಪಾಟೀಲ್ ಕೃಷಿ ಸಚಿವರಾದ ಮೇಲೆ ಜಿಲ್ಲೆಯ ಹಲವು ಯೋಜನೆಗಳು ಸಾಕಾರಗೊಳ್ಳುವ ಅಶಾಭಾವನೆ ಇತ್ತು. ಆದರೆ ಬಸವರಾಜ ಬೊಮ್ಮಾಯಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ.
ಸಿಎಂ ಬೊಮ್ಮಾಯಿ ತಮ್ಮ ಕ್ಷೇತ್ರ ಶಿಗ್ಗಾಂವಿ ಮತ್ತು ಸವಣೂರು ತಾಲೂಕುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಕೃಷಿ ಸಚಿವರು ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕುಗಳಿಗೆ ಗಮನ ನೀಡುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗುತ್ತಿಲ್ಲ ಎಂದರು.
ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದು ತಮಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗುತ್ತಿದೆ. ಅನುದಾನ ಮಾತ್ರವಲ್ಲ, ಪ್ರತಿಯೊಂದು ವಿಭಾಗದಲ್ಲಿ ಕಡೆಗಣನೆಯಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಶಾಲಾ ಕೊಠಡಿಗಳ ಬಿಡುಗಡೆಯಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ಮಲತಾಯಿ ಧೋರಣಿ ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
60 ಶಾಲಾ ಕೊಠಡಿಗಳನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರೆ 20 ಕೊಠಡಿಗಳು ಬಿಡುಗಡೆಯಾಗಿವೆ. ಉಳಿದ ತಾಲೂಕುಗಳಿಗೆ 40 ಕೊಠಡಿಗಳನ್ನು ಬಿಡುಗಡೆ ಮಾಡಲಾಗಿದೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ 293 ರಸ್ತೆಗಳು ಹಾಳಾಗಿವೆ. ಈ ಕುರಿತಂತೆ ಮನವಿ ಸಲ್ಲಿಸಿದರೆ 90 ರಸ್ತೆಗಳ ದುರಸ್ತಿಗೆ ಸರ್ಕಾರ ಮುಂದಾಗಿದೆ. ಸಿಎಂ ಪ್ರತಿನಿಧಿಸುವ ಶಿಗ್ಗಾಂವಿ ಸವಣೂರು ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್ ಪ್ರತಿನಿಧಿಸುವ ಹಿರೇಕೆರೂರು ರಟ್ಟಿಹಳ್ಳಿ ಕ್ಷೇತ್ರಗಳಲ್ಲಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.
ಇದನ್ನೂ ಓದಿ: ಎರಡು ತಾಲೂಕುಗಳಿಗೆ ಮಲತಾಯಿ ಧೋರಣೆ : ಅಡಕೆ ಬೆಳೆಗೆ ಸಬ್ಸಿಡಿ ನೀಡುವಂತೆ ರೈತರ ಒತ್ತಾಯ