ಹಾವೇರಿ: ನೆರೆ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಎದುರು ದನಕರುಗಳನ್ನು ಕಟ್ಟಿಹಾಕಿ, ಕೈಯಲ್ಲಿ ಬೆಳೆಗಳನ್ನು ಹಿಡಿದು ರೈತರು ಪ್ರತಿಭಟನೆ ನಡೆಸಿದರು. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದರು. ಅಲ್ಲದೆ ನೆರೆಯಲ್ಲಿ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಪುನರ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಉಂಟಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ವಾಪಸ್ ಪಡೆದರು.