ರಾಣೆಬೆನ್ನೂರು(ಹಾವೇರಿ): ತಾಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ರೋಗಿಗಳನ್ನು ಕೋವಿಡ್ ಆಸ್ಪತ್ರೆಗೆ ಕಳಿಸದೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಮಾಡಿದ ಘಟನೆ ರಾಣೆಬೆನ್ನೂರು ನಗರದ ಸರ್ಕಾರಿ ಆಸ್ಪತ್ರೆ ಬಳಿ ನಡೆದಿದೆ.
ಇಲ್ಲಿನ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ರಾಣೆಬೆನ್ನೂರು ತಾಲೂಕಿನಲ್ಲಿ ಕೊರೊನಾ ಸೋಂಕು ಕಂಡು ಬಂದ ರೋಗಿಗಳನ್ನು ಅನವಶ್ಯಕವಾಗಿ ಅಡ್ಮಿಟ್ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಆಸ್ಪತ್ರೆ ಅಕ್ಕಪಕ್ಕದ ಜನರಿಗೆ ಸೋಂಕು ಹರಡುವ ಸಂಭವ ಹೆಚ್ಚಾಗಿದೆ ಎಂದು ಸರ್ಕಾರಿ ಆಸ್ಪತ್ರೆ ಅಕ್ಕಪಕ್ಕದ ಜನರು ಗೇಟ್ ಬಂದ್ ಮಾಡಿ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೊಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ನಗರಸಭಾ ಸದಸ್ಯ ನಿಂಗರಾಜ ಕೋಡಿಹಳ್ಳಿ ಮಾತನಾಡಿ, ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಈಗಾಗಲೇ ಕೊರೊನಾಗೆ ಸಂಬಂಧಿಸಿದ ಎಲ್ಲಾ ಚಿಕಿತ್ಸೆ ಕಾರ್ಯಗಳು ನಡೆಯುತ್ತಿವೆ. ಆದರೆ ತಾಲೂಕು ಆಡಳಿತ ಇಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಇದರಿಂದ ಆಸ್ಪತ್ರೆ ಅಕ್ಕಪಕ್ಕದ ಜನ ಭಯದ ವಾತವರಣದಲ್ಲಿ ಜೀವನ ಮಾಡುವ ಸನ್ನಿವೇಶ ಎದುರಾಗಿದೆ. ದಯಮಾಡಿ ಅಧಿಕಾರಿಗಳು ಕೊರೊನಾ ಪಾಸಿಟಿವ್ ರೋಗಿಗಳನ್ನು ಹಾವೇರಿ ಕೋವಿಡ್ ಆಸ್ಪತ್ರೆಗೆ ರವಾನಿಸಬೇಕು ಎಂದು ಆಗ್ರಹಿಸಿದರು.