ಹಾಸನ: ನೆರೆ, ಬರ ಪರಿಹಾರ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನೆರೆ ಹಾವಳಿಯಿಂದ ಹಾನಿಗೊಳಗಾದ ಸಂತ್ರಸ್ತರ ಮನೆಗಳ ನಿರ್ಮಾಣ ಪ್ರಗತಿ ವಿವರ ಹಾಗೂ ಈಗಾಗಲೇ ನಡೆಯುತ್ತಿರುವ ಮನೆ ಕಾಮಗಾರಿ ಫೋಟೋಗಳನ್ನು ಅಪ್ಲೋಡ್ ಮಾಡುವಂತೆ ತಿಳಿಸಿದರು.
ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್ ರಾಜ್, ಕಂದಾಯ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಫೆ.10 ರೊಳಗೆ ಪ್ರಾರಂಭಿಸಬೇಕು ಎಂದರಲ್ಲದೆ, ಹಾಸನ ಜಿಲ್ಲೆಯಲ್ಲಿ ಬಾಕಿಯಿರುವ 195 ಕಾಮಗಾರಿಗಳು ತ್ವರಿತವಾಗಿ ಮುಕ್ತಾಯಗೊಳಿಸಲು ಹೇಳಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ 640 ಮನೆಗಳ ಕಾಮಗಾರಿ ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, ಜಿಲ್ಲೆಗೆ ನೀಡಿದ 27 ಕೋಟಿ ಹಣದಲ್ಲಿ 1,938 ಕೆಲಸವನ್ನು ಆರಂಭಿಸಲಾಗಿದೆ. ಪ್ರವಾಹದಿಂದ ಜಿಲ್ಲೆಯಲ್ಲಿ 25,542 ರೈತರ ಬೆಳೆ ಹಾನಿಗೊಳಗಾಗಿದ್ದು, 40 ಕೋಟಿ ರೂ. ಹಣವನ್ನು ಪರಿಹಾರವಾಗಿ ನೀಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ ಪರಮೇಶ್ ಮಾತನಾಡಿ, ಫೆ.13ಕ್ಕೆ ಕಾಮಗಾರಿಗಳ ಟೆಂಡರ್ ಆಗಲಿದ್ದು, ಮಾರ್ಚ್ ಒಳಗೆ ಕೆಲಸ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.