ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಬಿಜೆಪಿ ನಾಯಕರು ಕೊನೆಯ ಹಂತದ ಮತಬೇಟೆ ಭರ್ಜರಿಯಾಗಿ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ ಪರವಾಗಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರು ಬಹಿರಂಗ ಪ್ರಚಾರ ಸಭೆ ಮೂಲಕ ಮತಯಾಚನೆ ಮಾಡಿದರೆ, ಬಿಜೆಪಿ ಅಭ್ಯರ್ಥಿ ಅವಿನಾಶ ಜಾಧವ ಪರವಾಗಿ ಮಾಜಿ ಸಿಎಂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿ ಹಲವು ನಾಯಕರು ಬಹಿರಂಗ ಪ್ರಚಾರ ಸಭೆ ಮೂಲಕ ಮತಯಾಚನೆ ಮಾಡಿದರು.
ಮಂಗಳವಾರ ಬೆಳಗ್ಗೆಯಿಂದ ರಾತ್ರಿವರೆಗೆ ಮತಬೇಟೆ ಭರ್ಜರಿಯಾಗಿ ನಡೆಯಿತು. ಕಾಳಗಿ ವ್ಯಾಪ್ತಿಯಲ್ಲಿ ನಡೆದ ಯಡಿಯೂರಪ್ಪ ಸಭೆಗೆ ರಾತ್ರಿ 9.30 ಆದರೂ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದು ವಿಶೇಷವಾಗಿತ್ತು. ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದರೂ ಆಡಳಿತ ನಡೆಸುತ್ತಿರುವರಿಗೆ ಕಿಂಚಿತ್ತೂ ಕಾಳಜಿ ಇಲ್ಲ. ರೈತರ ಸಾಲ ಮನ್ನಾ ಮಾಡ್ತಿಲ್ಲ. ರಾಜ್ಯದಲ್ಲಿ ಹಣದ ಕೊರತೆ ಇಲ್ಲದಿದ್ರೂ ಪ್ರಮಾಣಿಕ ಕೈಗಳ ಕೊರತೆಯಿಂದ ಅಭಿವೃದ್ಧಿ ಕುಂಟಿತಗೊಳ್ಳುತ್ತಿದೆ. ಇಂತವರಿಗೆ ತಕ್ಕ ಪಾಠ ಕಲಿಸಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಆಯ್ಕೆ ಮಾಡಿದ್ರೆ ಕ್ಷೇತ್ರಕ್ಕೆ ಬೇಕಾದ ಎಲ್ಲ ಬೇಡಿಕೆ ಪೂರೈಸಲು ಪ್ರಾಮಾಣಿಕ ಪ್ರಯತ್ನ ಪಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.