ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳೋದಕ್ಕೆ ಇಂದು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಲಬುರಗಿ ಹೃದಯಭಾಗದ ಸರ್ದಾರ್ ಪಟೇಲ್ ವೃತ್ತ ಸೇರಿದಂತೆ ಡಿ ಆರ್ ಗ್ರೌಂಡ್, ಎನ್ ವಿ ಮೈದಾನವನ್ನೂ ಅಲಂಕರಿಸಲಾಗಿದೆ. ಹೈದರಾಬಾದ್ ಕರ್ನಾಟಕ ಸ್ವಾತಂತ್ರ್ಯ ರೂವಾರಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಹೂವು ಮತ್ತು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೂಡ ಕಲ್ಪಿಸಲಾಗಿದೆ.
ವಿಶೇಷ ವಿಮಾನ ಮೂಲಕ ಕಲಬುರಗಿ ವಿಮಾನ ನಿಲ್ದಾಣಕೆ ಬಂದಿಳಿಯಲಿರುವ ಸಿಎಂ ಬಿಎಸ್ವೈ, ನೇರ ಎಸ್ವಿಪಿ ವೃತ್ತಕ್ಕೆ ಆಗಮಿಸಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಲ್ಲಿದ್ದಾರೆ. ಬಳಿಕ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೇರವೆರಿಸಿ ತದನಂತರ ನೂತನ ವಿದ್ಯಾಲಯ ಮೈದಾನದಲ್ಲಿ ಸಿದ್ದವಾಗಿರುವ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.