ಕಲಬುರಗಿ: ಬೆಂಗಳೂರಿನಿಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ ನಾರಾಯಣ್ ಕಲಬುರಗಿ ಜಿಲ್ಲಾಧಿಕಾರಿ ಶರತ್ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್-19 ಮಹಾಮಾರಿಯಿಂದ ತತ್ತರಿಸಿರುವ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಇಲ್ಲಿನ ಪರಿಸ್ಥಿತಿ ಬಗ್ಗೆ ಸಮಗ್ರ ಮಾಹಿತಿ ಪಡೆದ ಡಿಸಿಎಂ, ಪರೀಕ್ಷೆ ನಡೆಸುವ ಸಂದರ್ಭದಲ್ಲಿ ವೈದ್ಯರು ಧರಿಸುವ 900 ರಕ್ಷಾ ಕವಚಗಳು (ಪರ್ಸನಲ್ ಪ್ರೊಟೆಕ್ಷನ್ ಗೇರ್), 1000 ಎನ್ 95 ಮಾಸ್ಕ್ಗಳು ಹಾಗೂ ಸಾರ್ವಜನಿಕರು ಬಳಸುವ ಮೂರು ಪದರಗಳ 3000 ಮಾಸ್ಕ್ಗಳನ್ನು ಶುಕ್ರವಾರ ಬೆಳಗ್ಗೆ ಹೊತ್ತಿಗೆ ಕಲಬುರಗಿಗೆ ತಲುಪಿಸುವದಾಗಿ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಶರತ್ ಅವರ ಮನವಿಯ ಮೇರೆಗೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಡಾ.ಗೋಪಾಲಕೃಷ್ಣ ಅವರನ್ನು ಕೂಡಲೇ ಜಿಲ್ಲೆಗೆ ನಿಯೋಜಿಸುತ್ತಿರುವುದಾಗಿ ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲ್ಲದೆ ಸೋಮವಾರದ ವೇಳೆಗೆ ಕೊರೊನಾ ರೋಗ ಪತ್ತೆ ಮಾಡುವ ಪ್ರಯೋಗಾಲಯವನ್ನು ಜಿಲ್ಲೆಯಲ್ಲಿ ಸ್ಥಾಪಿಸುವುದಾಗಿ ಹೇಳಿದರು.
ಇನ್ನು ಗಡಿ ಪ್ರದೇಶಗಳಿಂದ ಬರುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚಿಸಿದ ಉಪ ಮುಖ್ಯಮಂತ್ರಿಗಳು, ಅನುಮಾನ ಬಂದವರನ್ನು ಕಡ್ಡಾಯವಾಗಿ ತಪಾಸಣೆ ಮಾಡಿಸುವಂತೆ ತಿಳಿಸಿದ್ದಾರೆ. ಡಿಸಿಎಂ ಜೊತೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೆಲ್ಕೂರ, ಬಸವರಾಜ ಮತ್ತಿಮೂಡ, ಬಿ.ಜಿ.ಪಾಟೀಲ ಉಪಸ್ಥಿತರಿದ್ದರು.