ಕಲಬುರಗಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಇಎಸ್ಐ ಮತ್ತು ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಈ ಕೋವಿಡ್ ಸೆಂಟರ್ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ ಎಂಬಂತಾಗಿದೆ. ಸ್ವಚ್ಛತೆ ಅನ್ನೋದಂತೂ ಮರೀಚಿಕೆಯಾಗಿದೆ. ರೋಗಿಗಳನ್ನು ಹಾಗೂ ಕ್ವಾರಂಟೈನ್ ಮಾಡಿದವರನ್ನು ಭಿಕ್ಷುಕರಿಗಿಂತ ಕೀಳಾಗಿ ಕಾಣಲಾಗುತ್ತಿದೆಯಂತೆ. ರೋಗಿಗಳಿಗೆ ಕುಡಿಯಲು ನೀರಿನ ಕೊರತೆ ಇದ್ದು, ಶಂಕಿತರನ್ನು ಸರಿಯಾಗಿ ತಪಾಸಣೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಮತ್ತಷ್ಟು ಜನರು ಈ ಸೋಂಕಿಗೆ ಒಳಗಾಗುತ್ತಿದ್ದಾರೆ. ಸೋಂಕಿತರ ಬಳಿ ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಯಾರೂ ಕೂಡ ಹೋಗುವ ಹಾಗಿಲ್ಲ. ಆದರೆ, ಇಲ್ಲಿ ವೈದ್ಯರು ಬಾರದ ಕಾರಣ ಸಂಬಂಧಿಕರೇ ರೋಗಿಗಳ ಆರೈಕೆ ಮಾಡುತ್ತಿದ್ದು, ಇನ್ನಷ್ಟು ಜನ ಈ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.
ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಇಲ್ಲದಿದ್ರೆ ಕೊರೊನಾ ಮಹಾಮಾರಿ ಎಲ್ಲಾ ಕಡೆ ವಿಸ್ತರಿಸಿ ಜನರನ್ನು ಬಲಿ ತೆಗೆದುಕೊಳ್ಳುತ್ತದೆ ಎಂಬುದು ಸ್ಥಳೀಯರ ಆತಂಕವಾಗಿದೆ.
ಈ ಸಂಬಂಧ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ, ಶಾಸಕ ಅಜಯಸಿಂಗ್ ಅವರು ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.