ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗ ಎಂದು ಪರಿಗಣಿಸಲ್ಪಡುವ ಮಾಧ್ಯಮವನ್ನು ಪ್ರಸ್ತುತ ನಡೆಯುತ್ತಿರುವ ಕಲಾಪಕ್ಕೆ ನಿರ್ಬಂಧಿಸಿರುವುದು ಸಮಂಜಸವಾದ ಕ್ರಮವಲ್ಲ. ಕೂಡಲೇ ನಿರ್ಬಂಧವನ್ನು ವಾಪಸ್ ಪಡೆಯುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ವಿಧಾನಸಭೆ ಕಲಾಪಗಳಿಗೆ ಮಾಧ್ಯಮಗಳಿಗೆ ನಿರ್ಬಂಧ: ಸ್ಪೀಕರ್ಗೆ ಮನವಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಸಂವಿಧಾನದ ಆಶಯದ ಕುರಿತು ವಿಧಾನಸಭೆ ಕಲಾಪದಲ್ಲಿ ಚರ್ಚಿಸಲು ನಿರ್ಧರಿಸಿದ್ದು ಸ್ವಾಗತಾರ್ಹ ಬೆಳವಣಿಗೆ. ಆದರೆ, ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗವಾದ ಮಾಧ್ಯಮದ ಪ್ರತಿನಿಧಿಗಳಿಗೆ ಕಲಾಪದ ಒಳಗಡೆ ಪ್ರವೇಶ ನಿರ್ಬಂಧಿಸಿರುವ ಕ್ರಮ ಸರಿಯಾದುದದಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ಕಲಾಪದಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಚರ್ಚಿಸುವ ಹಾಗೂ ಪರಿಹಾರ ಕಂಡುಕೊಳ್ಳುವ ಬಗ್ಗೆ ಜನರು ತಿಳಿದುಕೊಳ್ಳಬೇಕು.

ಅದು ಕೇವಲ ಮಾಧ್ಯಮಗಳಿಂದ ಸಾಧ್ಯ. ಹಾಗಾಗಿ ಮಾಧ್ಯಮಗಳಿಗೆ ನಿರ್ಬಂಧಿಸಿದರೆ ಸ್ವಾತಂತ್ರ್ಯಕ್ಕೆ ಧಕ್ಕೆ ತರುವುದರ ಜೊತೆಗೆ ಜನರಿಗೆ ಕಲಾಪಗಳ ಮಾಹಿತಿ ದೊರಕದಂತೆ ತಡೆದಂತಾಗುತ್ತದೆ. ಮಾಧ್ಯಮಗಳಿಗೆ ವರದಿ ಮಾಡಲು ಅವಕಾಶ ನೀಡಬೇಕೆಂದು ಅವರು ತಮ್ಮ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ.