ಕೊಡಗು: ಸಿಎಎ ವಿರೋಧಿಸಿ ಸಾರ್ವಜನಿಕ ಸಮಾವೇಶದಲ್ಲಿ ವೇದಿಕೆ ದುರ್ಬಳಕೆ ಹಿನ್ನೆಲೆ ಇಂತಹ ಪ್ರಕರಣಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರಗಳ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಹಲವು ದೇಶ ವಿರೋಧಿ ಸಂಘಟನೆಗಳು ಸಿಎಎ ವಿರುದ್ಧ ನಡೆಯುತ್ತಿರುವ ಪ್ರತಿಭಟನಾ ಸಮಾವೇಶಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇಂತಹ ಹೇಳಿಕೆಗೆ ಪ್ರಚೋದನೆ ನೀಡುತ್ತಿರುವ ಸಂಘಟನೆಗಳನ್ನು ಮಟ್ಟ ಹಾಕುತ್ತೇವೆ. ಯಾವುದೇ ಹಂತಕ್ಕೆ ಅವುಗಳನ್ನು ಬೆಳೆಯಲು ನಾವು ಬಿಡುವುದಿಲ್ಲ. ಈ ರೀತಿಯ ಘಟನೆಗಳಿಗೆ ಕಾರಣವಾಗಿರುವ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಭಾರತ ಒಂದು ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲಂತೂ ದೇಶ ಎಲ್ಲಾ ಕ್ಷೇತ್ರಗಳಲ್ಲೂ ವೇಗವಾಗಿ ಬೆಳೆಯುತ್ತಿದೆ. ಆರ್ಥಿಕವಾಗಿ ವಿಶ್ವದಲ್ಲಿ ಭಾರತ ಅತ್ಯಂತ ಐದನೇ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದ ಜಿಡಿಪಿ (ಒಟ್ಟು ದೇಶಿಯ ಉತ್ಪಾದನೆ) ಬೆಳವಣಿಗೆಯೂ ಸುಧಾರಿಸಿದೆ. ಈ ಹಿನ್ನೆಲೆ ವಿಶ್ವದ ಹಲವು ಶ್ರೀಮಂತ ರಾಷ್ಟ್ರಗಳೂ ಭಾರತದ ಸಂಪರ್ಕ ಬೆಳೆಸಲು ಬಯಸುತ್ತಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡಾ ದೇಶದೊಂದಿಗೆ ಹಲವು ಮಹತ್ವದ ಒಪ್ಪಂದಗಳನ್ನು ಮಾಡಿಕೊಳ್ಳಲಿದ್ದಾರೆ. ಇನ್ನು ದೇಶದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ ಎಂದರು.