ಕೊಡಗು: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ.
ಮಾದಕ ವಸ್ತು, ಅಪರಾಧ ತಡೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಜನತೆ ಆತ್ಮ ಶಿಸ್ತಿನಿಂದ ವರ್ತಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ಮುಂದೆಯೂ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಇದೊಂದು ಜನಾಂದೋಲನದ ರೀತಿಯಲ್ಲಿ ಆಗಬೇಕಿದೆ ಎಂದರು.
ಹಾಗೆಯೇ ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಬೇರು ಸಹಿತ ಕಿತ್ತೊಗೆಯುವ ಸಂಕಲ್ಪ ಮಾಡಿದ್ದೇವೆ. ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆಯೂ ಅರಿವು ಮೂಡಿಸುತ್ತಿದ್ದೇವೆ. ಅಲ್ಲದೆ ಪೊಲೀಸ್ ಇಲಾಖೆಯಿಂದ 112 ತುರ್ತು ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.