ಕೊಡಗು: ಜಿಲ್ಲೆಯಲ್ಲಿ 2018 ರ ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಯಿಂದ ನೆಲೆ ಕಳೆದುಕೊಂಡು ಮನೆ ಹಸ್ತಾಂತರಕ್ಕೆ ಬಾಕಿ ಇದ್ದ 75 ಕುಟುಂಬಗಳಿಗೆ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ಚೀಟಿ/ಲಾಟರಿ ತೆಗೆಯುವ ಮೂಲಕ ಮನೆ ಹಂಚಿಕೆ ಮಾಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ರಾಜೀವ್ ಗಾಂಧಿ ವಸತಿ ನಿಗಮದ ಇಂಜಿನಿಯರ್ ಶ್ರೀನಿವಾಸ್ ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಚೀಟಿ ತೆಗೆಯುವ ಮೂಲಕ ಮನೆ ಹಂಚಿಕೆ ಮಾಡಲಾಯಿತು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿದ್ದ ಕುಟುಂಬಗಳಿಗೆ ಮೊದಲ ಹಂತದಲ್ಲಿ ಕರ್ಣಂಗೇರಿಯಲ್ಲಿ 35 ಮನೆಗಳು, ಮಾದಾಪುರ ಬಳಿಯ ಜಂಬೂರಿನಲ್ಲಿ 383, ಮದೆನಾಡು ಬಳಿ 80 ಮನೆಗಳು, ಹಾಗೆಯೇ ಹಾಕತ್ತೂರು ಬಳಿಯ ಬಿಳಿಗೇರಿಯಲ್ಲಿ 22, ಮತ್ತು ಗಾಳಿಬೀಡು ಬಳಿ 140 ಮನೆಗಳು ಸೇರಿದಂತೆ ಒಟ್ಟು ಮೂರು ಹಂತದಲ್ಲಿ 660 ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ.
ಉಳಿದಂತೆ ಕೆ.ನಿಡುಗಣೆ ಗ್ರಾ.ಪಂ.ವ್ಯಾಪ್ತಿಯ ಆರ್ಟಿಒ ಕಚೇರಿ ಬಳಿ 75 ಮನೆಗಳನ್ನು ನಿರ್ಮಿಸಲಾಗಿದ್ದು, ಆ ನಿಟ್ಟಿನಲ್ಲಿ ಮನೆ ಹಂಚಿಕೆ ಪ್ರಕ್ರಿಯೆ ಮಾಡಲಾಗಿದೆ. ಉಳಿದಂತೆ ಈ ತಿಂಗಳ ಅಂತ್ಯದೊಳಗೆ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು.
ಮನೆ ಹಂಚಿಕೆಯ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸೂಚನಾ ಫಲಕದಲ್ಲಿ ಅಥವಾ ವೆಬ್ಸೈಟ್ http://www.kodagu.nic.in ಪ್ರಕಟಿಸಲಾಗಿದ್ದು, ಸಂತ್ರಸ್ತ ಕುಟುಂಬದವರು ಯಾವ ನಂಬರಿನ ಮನೆ ಯಾವ ಕುಟುಂಬಕ್ಕೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಂತ್ರಸ್ತರಿಗೆ ಮನೆ ಸಂಖ್ಯೆ ನಿಗದಿಯಾಗಿರುವುದರಿಂದ ವಿದ್ಯುತ್ ಸಂಪರ್ಕವನ್ನು ಪಡೆಯಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಆಧಾರ್ ಕಾರ್ಡ್ ಪ್ರತಿ ಮತ್ತು ಕುಟುಂಬದವರ ಭಾವಚಿತ್ರವನ್ನು ಸೆಸ್ಕ್ ಕಚೇರಿಗೆ ನೀಡಲು ಮುಂದಾಗಬೇಕು. ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಇದನ್ನೂ ಓದಿ: ರಾಜ್ಯಾದ್ಯಂತ ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ