ಕೊಡಗು: ಕೋವಿಡ್ ನಿಯಂತ್ರಣದ ಸಲುವಾಗಿ ವಾರದಲ್ಲಿ ಎರಡು ದಿನಗಳ ಕಾಲ ಮಾತ್ರ ನಿಗದಿತ ವೇಳೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ಇತ್ತು. ಈ ನಿಯಮ ಬದಲಾವಣೆ ಮಾಡಿ ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ. ಇದ್ರ ಜತೆಗೆ, ಸರ್ಕಾರದ ಮಾರ್ಗಸೂಚಿ ಪಾಲಿಸುವ ನಿಟ್ಟಿನಲ್ಲಿ ವಾರದ ಮೂರು ದಿನ ಬೆಳಗ್ಗೆ 06 ರಿಂದ 10 ಗಂಟೆಯವರೆಗೆ ವ್ಯವಹರಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸರ್ಕಾರ ಹೊರಡಿಸಿರುವ ಲಾಕ್ಡೌನ್ ಮಾರ್ಗಸೂಚಿ ಪಾಲನೆ ಸಂಬಂಧ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಗ್ಗೆ 6 ರಿಂದ ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಲಿಖಿತ ಆದೇಶ ಹೊರಡಿಸಲಾಗುವುದು ಎಂದರು.
ಸಂತೆಗೆ ಆಗಮಿಸಿ ತರಕಾರಿ, ಹಣ್ಣು ಮತ್ತು ಇತರೆ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದವರಿಗೆ ತಾತ್ಕಾಲಿಕ ಗುರುತಿನ ಚೀಟಿ ನೀಡಿ ತಳ್ಳುಗಾಡಿ ಅಥವಾ ಚಿಕ್ಕ ಗೂಡ್ಸ್ ವಾಹನದಲ್ಲಿ ಬಡಾವಣೆಗೆ ತೆರಳಿ ಮಾರಾಟ ಮಾಡಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ತರಕಾರಿ ಅಥವಾ ಇನ್ನಿತರೆ ಖರೀದಿಗೆಂದು ಜನರು ಮಾರುಕಟ್ಟೆಗೆ ಬರುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಡಾವಣೆಗೆ ತೆರಳಿ ತರಕಾರಿ ಮತ್ತು ಹಣ್ಣು ಮಾರಾಟ ಮಾಡುವವರಿಗೆ ವಾರಕ್ಕೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಹಾಗಾಗಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ಮಾಡುವುದರ ಜತೆಗೆ, ಹೋಂ ಕ್ವಾರಂಟೈನ್ಗಳಲ್ಲಿ ಕಡ್ಡಾಯವಾಗಿ ಇರುವಂತೆ ಕ್ರಮ ವಹಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕಾಳಜಿ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಈ ಸಂಬಂಧ ತಹಶೀಲ್ದಾರ್ಗಳು, ತಾ.ಪಂ. ಇಒಗಳು ಗಮನ ಹರಿಸಬೇಕು. ಕೋವಿಡ್ ಪಾಸಿಟಿವ್ ಕಂಡುಬಂದಲ್ಲಿ ಅವರ ಮನೆಯವರ ಜತೆಗೆ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಇದೇ ವೇಳೆ ಸಂಬಂಧಪಟ್ಟ ಇಲಾಖೆಯವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ: ಇಂದಿನಿಂದ ಅಗತ್ಯ ವಸ್ತುಗಳ ಖರೀದಿಗೆ ಖಾಸಗಿ ವಾಹನ ಬಳಕೆಗೆ ಅನುಮತಿ: ಡಿಜಿಪಿ ಪ್ರವೀಣ್ ಸೂದ್
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು, ಸಂಪರ್ಕಿತರನ್ನು ಪತ್ತೆ ಹಚ್ಚುವಲ್ಲಿ ಇನ್ನಷ್ಟು ಪ್ರಯತ್ನಿಸಬೇಕು. ಸೋಂಕಿತರು ಕಂಡು ಬಂದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಕಳುಹಿಸಬೇಕು. ಅಗತ್ಯ ಮಾತ್ರೆಗಳನ್ನು ತಲುಪಿಸಬೇಕು. ಹೋಂ ಐಸೋಲೇಶನ್ನಲ್ಲಿ ಇರುವವರ ಬಗ್ಗೆ ಆಗಾಗ ನಿಗಾ ವಹಿಸಬೇಕು. ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆಯೂ ಸೂಚಿಸಿದರು. ಇನ್ನು, ಅಂತರ ರಾಜ್ಯ ಮತ್ತು ಅಂತರ ಜಿಲ್ಲೆಯಿಂದ ಆಗಮಿಸುವವರ ಮಾಹಿತಿ ಸಂಗ್ರಹಿಸಿ, ಹೋಂ ಕ್ವಾರಂಟೈನ್ ಮಾಡಿ, ಸೀಲ್ ಹಾಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.