ಕೊಪ್ಪಳ : ಮೆಜಾರಿಟಿ ಇಲ್ಲದೆ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚಿಸಲು ಮುಂದಾಗಿದ್ದು, ಪ್ರಮಾಣವಚನ ಸ್ವೀಕರಿಸಿ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿದ್ದಾರೆ ಎಂದು ಕೊಪ್ಪಳದ ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂವರು ಶಾಸಕರು ಅನರ್ಹಗೊಂಡಿದ್ದು, ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತುಪಡಿಸಲು 111 ಜನ ಶಾಕರು ಬೇಕಾಗಿದ್ದಾರೆ. ಆದರೆ, ಅವರು ಯಾವ ರೀತಿ ಬಹುಮತ ಸಾಬೀತು ಮಾಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ಅವರು 105 ಜನ ಶಾಸಕರನ್ನು ಇಟ್ಟುಕೊಂಡು ಸರ್ಕಾರ ರಚಿಸಲು ಹೊರಟಿದ್ದಾರೆ.
ಇದು ಹೇಗೆ ಸಾಧ್ಯ. 2008 ಮತ್ತು 2018ರಲ್ಲಿ ಸಹ ಮೆಜಾರಿಟಿ ಇಲ್ಲದೆ ಸರ್ಕಾರ ರಚಿಸಲು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬಹುಮತವಿಲ್ಲದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈ ಬಾರಿಯೂ ಅದೇ ರೀತಿಯಾಗಲಿದ್ದು, ಹ್ಯಾಟ್ರಿಕ್ ಸಾಧನೆ ಮಾಡಲು ಹೊರಟಿರುವಂತಿದೆ ಎಂದು ವ್ಯಂಗ್ಯವಾಡಿದರು.
ಯಡಿಯೂರಪ್ಪನವರು ಯಾವ ಲೆಕ್ಕದಲ್ಲಿ ಸರ್ಕಾರ ರಚನೆ ಮಾಡಲು ಹೊರಟಿದ್ದಾರೆ ಎಂಬುದು ನನಗೆ ತಿಳಿಯುತ್ತಿಲ್ಲ. ಅವರದು ಆತುರದ ನಿರ್ಧಾರ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.