ಗಂಗಾವತಿ: ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ತಮಿಳುನಾಡಿನ ಚೆನ್ನೈನಿಂದ ಜಿಲ್ಲೆಗೆ ಆಗಮಿಸಿದ್ದ ಸುಮಾರು 300ಕ್ಕೂ ಅಧಿಕ ಜನರ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷೆಗೆ ಕಳಿಸಲಾಗಿದೆ.

ಕೆಲಸ ಅರಸಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಜನರು ತಮ್ಮ ಸ್ವಗ್ರಾಮಗಳಿಗೆ ವಾಪಸಾಗುತ್ತಿದ್ದು, ಮೊದಲ ಬಾರಿಗೆ ಮೂರು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಚೆನ್ನೈ ಮೂಲದ ವ್ಯಕ್ತಿಗೂ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತೆ ಕೈಗೊಳ್ಳಲು ಮುಂದಾಗಿದೆ.
ಇತ್ತೀಚೆಗೆ ಗುಳೆ ಹೋಗಿದ್ದ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಹಗಲು ವೇಷಗಾರರ ಕುಟುಂಬಗಳ 300ಕ್ಕೂ ಹೆಚ್ಚು ಜನರು ಇದೀಗ ಗ್ರಾಮಕ್ಕೆ ಹೊಂತಿರುಗಿದ್ದು, ಅವರೆಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿರುವ ಸುಮಾರು 112 ಜನರಿಗೆ ಇಲ್ಲಿನ ಉಪ ವಿಭಾಗ ಆಸ್ಪತ್ರೆಯಲ್ಲಿ ಸಾಮೂಹಿಕವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ.