ಕೊಪ್ಪಳ: ಕೊರೊನಾ ಸಂದರ್ಭದಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಕೆಲಸ ಮಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಸರ್ಕಾರ ವಿಶೇಷ ಭತ್ಯೆ ನೀಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ.ಪುರುಷೋತ್ತಮ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಇಲಾಖೆಗಳ ಸಿಬ್ಬಂದಿ ಜೀವದ ಹಂಗು ತೊರೆದು ಸಾರ್ವಜನಿಕರಿಗೆ ಸೇವೆ ನೀಡಿದ್ದಾರೆ. ಆದರೆ ಸರ್ಕಾರ ವೈದ್ಯಾಧಿಕಾರಿಗಳಿಗೆ ಮಾತ್ರ ಕೊರೊನಾ ವಿಶೇಷ ಭತ್ಯೆ ನೀಡಿದೆ. ಆದರೆ ನೌಕರರಿಗೆ ನೀಡಿಲ್ಲ. ವೈದ್ಯರಿಗೆ ವಿಶೇಷ ಭತ್ಯೆ ನೀಡಬೇಡಿ ಎಂದು ಹೇಳುವುದಿಲ್ಲ. ಆದರೆ ನಮ್ಮ ಇಲಾಖೆಯ ಸಿಬ್ಬಂದಿ ಕೊರೊನಾ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಮಾಡಿದ್ದಾರೆ. ಹೀಗಾಗಿ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಕೊರೊನಾ ವಿಶೇಷ ಭತ್ಯೆ ನೀಡಬೇಕೆಂದು ಆಗ್ರಹಿಸಿದರು.
ಇನ್ನು ಈ ಎರಡೂ ಇಲಾಖೆಗಳಲ್ಲಿ ಮಂಜೂರಾದ 69,667 ಹುದ್ದೆಗಳಲ್ಲಿ ಸುಮಾರು 30 ಸಾವಿರ ಹುದ್ದೆಗಳು ಖಾಲಿ ಇವೆ. ಆದಾಗ್ಯೂ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಹಾಗೂ ವೃಂದ ನೇಮಕಾತಿಗಳ ನಿಯಮಗಳನ್ನು ಪರಿಷ್ಕರಿಸುವಂತೆ ಒತ್ತಾಯಿಸಿದರು.