ಗಂಗಾವತಿ: ನವಲಿಯಲ್ಲಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಮಾಡಲು 24 ಕೋಟಿ ರೂಪಾಯಿ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು, ಶಾಸಕ ಪರಣ್ಣ ಮುನವಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಂಗಭದ್ರಾ ನದಿಯಲ್ಲಿನ ಹೂಳು ನಿವಾರಣೆ ಅಸಾಧ್ಯವಾಗುತ್ತಿರುವ ಹಿನ್ನೆಲೆ ಪರ್ಯಾಯವಾಗಿ ಈ ಭಾಗದಲ್ಲಿ ನಾಲ್ಕು ಸಮತೋಲನ ಜಲಾಶಯ ನಿರ್ಮಾಣಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಮುಂದೆ ಬಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಎಲ್ಲೆಲ್ಲಿ ಸಮನಾಂತರ ಜಲಾಶಯ ನಿರ್ಮಾಣ ಮಾಡಬೇಕು ಎಂಬುವುದರ ಬಗ್ಗೆ ಸರ್ವೇ ಮಾಡಲು ಸೂಚಿಸಲಾಗಿತ್ತು. ಈಗ ನವಲಿಯಲ್ಲಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಮಾಡಲು ಹಣ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ವಿಸ್ತೃತ ವರದಿ ಬಂದ ಬಳಿಕ ಹಾಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗಮನಕ್ಕೂ ತರಲಾಗುವುದು ಎಂದರು.