ಕೊಪ್ಪಳ: ತಾಲೂಕಿನ ಗಿಣಗೇರಾ-ಚಿಕ್ಕಬಗನಾಳ, ಹಿರೇಬಗನಾಳ-ಹೊಸಳ್ಳಿ, ಹಿರೇಬಗನಾಳ-ಹಾಲವರ್ತಿ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಕರವೇ ಯುವ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕಿನ ಅಲ್ಲಾನಗರ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಸನಕಂಡಿ ಗ್ರಾಮದ ಮಾರ್ಗದಲ್ಲಿ ಸಾಕಷ್ಟು ಕೈಗಾರಿಕೆಗಳಿದ್ದು ಹಗಲು ರಾತ್ರಿ ಹೆಚ್ಚಿನ ಭಾರ ಹೊತ್ತ ವಾಹನಗಳು ಓಡಾಡುವುದರಿಂದ ರಸ್ತೆಗಳು ಹಾಳಾಗಿವೆ.
ಇದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಜನತೆ ಆ ರಸ್ತೆಗಳ ಮೂಲಕ ಓಡಾಡಲು ಹರಸಾಹಸ ಮಾಡುತ್ತಿದ್ದಾರೆ. ರಸ್ತೆಗಳನ್ನು ದುರಸ್ತಿ ಮಾಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.