ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತಕ್ಕೆ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಘಟನೆ ವಿಷಯ ತಿಳಿದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿಯನ್ನು ಅವಲೋಕಿಸಿದರು. ಅಲ್ಲದೆ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಬಳಿಕ ಮಾತನಾಡಿದ ಶಾಸಕ ಹಾಲಪ್ಪ ಆಚಾರ್, ಬೈಕ್ ಮತ್ತು ಮಿನಿ ಬಸ್ ನಡುವೆ ನಡೆದ ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿನಿ ಬಸ್ನಲ್ಲಿ ಸುಮಾರು 34 ಜನರು ಪ್ರಯಾಣ ಮಾಡುತ್ತಿದ್ದರು. ಇವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದವರಾಗಿದ್ದು, ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮಕ್ಕೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಅತ್ಯಂತ ಎಚ್ವರಿಕೆಯಿಂದ ವಾಹನಗಳ ಚಾಲಕರು ಚಾಲನೆ ಮಾಡಬೇಕು. ಅಜಾಗರೂಕ ಚಾಲನೆಯಿಂದ ಅಮಾಯಕರು ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಹೀಗಾಗಿ ಜನರು ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು.
ಗಾಯಾಳುಗಳು ಬೇಗ ಗುಣಮುಖರಾಗಲಿ ಹಾಗೂ ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಘಟನೆ ಕುರಿತು ಶಾಸಕ ಹಾಲಪ್ಪ ಆಚಾರ್ ವಿಷಾದ ವ್ಯಕ್ತಪಡಿಸಿದರು.
ಇದನ್ನು ಓದಿ: ಬೈಕ್, ಮಿನಿ ಬಸ್ ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು, 8 ಜನರ ಸ್ಥಿತಿ ಗಂಭೀರ