ಕೊಪ್ಪಳ: ನಾನು ಸರಿಯಾಗಿಯೇ ಇದ್ದೇನೆ. ಬೇಕಾದರೆ ವೈದ್ಯರನ್ನು ಕಳಿಸಿ ಅನುಮಾನ ಪರಿಹರಿಸಿಕೊಳ್ಳಿ ಎಂದು ಕೊಪ್ಪಳದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಮಾವೇಶಕ್ಕೆ ಸೇರಿದ್ದ ಜನತೆಯನ್ನು ನೋಡಿ ನನಗೇನು ಆಗಿಲ್ಲ. ಏಪ್ರಿಲ್ 12ರಂದು ಗಂಗಾವತಿಯಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶವನ್ನು ನೋಡಿ ಅವರಿಗೇನಾಗುತ್ತದೆಯೋ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನನಗೆ ಸಿಕ್ಕ ಅವಕಾಶದಲ್ಲಿ ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಅವರು ಬೇರೆ ಬೇರೆ ಸಂಪನ್ಮೂಲಗಳನ್ನು ಬಳಸಿಕೊಂಡು ಗೆಲ್ಲುತ್ತೇವೆ ಎಂದು ಭಾವಿಸಿದ್ದಾರೆ. ಆದರೆ, ಜನರ ತೀರ್ಮಾನವೇ ಅಂತಿಮ. ಮೋದಿ ಅವರ ಕಾರ್ಯಕ್ರಮದ ಬಳಿಕ ಜನರ ಒಲವು ನಮ್ಮ ಕಡೆ ಮತ್ತಷ್ಟು ಹೆಚ್ಚಲಿದೆ. ಹೀಗಾಗಿ, ಈ ಬಾರಿಯೂ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.