ಕುಷ್ಟಗಿ (ಕೊಪ್ಪಳ): ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಖಾಸಗಿ ವೈದ್ಯರು ಹಾಗೂ ಪ್ರಯೋಗಾಲಯಗಳ ತಜ್ಞರು ಕೂಡ ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಮನವಿ ಮಾಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿತರನ್ನು ಪತ್ತೆ ಹಚ್ಚುವುದು, ಕ್ವಾರಂಟೈನ್ಗೆ ಒಳಪಡಿಸುವುದು, ಅವರಲ್ಲಿನ ಸೋಂಕು ಕುರಿತ ಪತ್ತೆಗೆ ಕ್ರಮ ಕೈಗೊಳ್ಳುವುದು ಮತ್ತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರನ್ನು ವಾರಿಯರ್ಸ್ ಎಂದು ಗುರುತಿಸಿ ಸಮಾಜ ಗೌರವಿಸುತ್ತಿದೆ. ಜನರಿಗೆ ವೈದ್ಯಕೀಯ ಸೇವೆ ನೀಡುತ್ತಿರುವ ಖಾಸಗಿಯವರೂ ಈ ಗುಂಪಿನಲ್ಲಿ ಗುರುತಿಸಿಕೊಳ್ಳುಬೇಕು ಎಂದರು.
ಈ ವಿಷಯ ಕುರಿತು ಮಾಹಿತಿ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು, ತಹಶೀಲ್ದಾರ್ ಎಂ.ಸಿದ್ದೇಶ್, ಎರಡು ಮೂರು ವಾರಗಳ ಈಚೆಗೆ ಬೇರೆ ರಾಜ್ಯದಿಂದ ಬಂದವರನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಬೇಕು. ಕೆಮ್ಮು, ನೆಗಡಿ, ಜ್ವರ ಇತರ ಬಾಧೆಗಳ ಜನರು ತಮ್ಮ ಬಳಿ ಬಂದರೆ ಅವರು ಕ್ವಾರಂಟೈನ್ಗೆ ಒಳಪಟ್ಟಿದ್ದಾರೋ ಇಲ್ಲವೋ ಎಂಬುದನ್ನು ದೂರದಿಂದಲೇ ಪರೀಕ್ಷಿಸಬೇಕು. ಅನುಮಾನಗಳಿದ್ದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಇನ್ನು ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಅಶೋಕಪಾಟೀಲ, ಪಟ್ಟಣದ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಿಎಎಂಎಸ್ ವೈದ್ಯರು, ಆರೋಗ್ಯ ಕಾರ್ಯಕರ್ತರು, ಪ್ರಯೋಗಾಲಯ ತಜ್ಞರು ಸಭೆಯಲ್ಲಿದ್ದರು.