ಮಂಡ್ಯ: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆ ಗರಿಗೆದರಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್ ನಾಯಕರು ಯೋಜನೆ ರೂಪಿಸಿದ್ದಾರೆ.
ಈ ಹಿನ್ನೆಲೆ ಶ್ರೀರಂಗಪಟ್ಟಣ ಪುರಸಭೆಯ 23 ಸ್ಥಾನಗಳಿಗೆ ಚುನಾವಣೆ ಎದುರಿಸಲು ಕಾಂಗ್ರೆಸ್ ಇಂದು ಆಕಾಂಕ್ಷಿಗಳ ಸಭೆ ನಡೆಸಿತು. ರೆಬೆಲ್ ನಾಯಕ ರಮೇಶ್ ಬಂಡಿಸಿದ್ದೇಗೌಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಅಧಿಕಾರ ಹಿಡಿಯಲು ಒಗ್ಗಟ್ಟಿನ ಮೂಲಕ ಚುನಾವಣೆ ಎದುರಿಸುವಂತೆ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮನವಿ ಮಾಡಿದರು.
ಈಗಾಗಲೇ ರಾಜ್ಯ ನಾಯಕರು ಸ್ಥಳೀಯ ಸಂಸ್ಥೆ ಚುನಾವಣೆಗೆ ಮೈತ್ರಿ ಇಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ನಾವು ಫ್ರೆಂಡ್ಲಿ ಫೈಟ್ ಮಾಡಬೇಕಾಗಿದೆ ಎಂದು ಹೇಳಿದ್ರು.