ಮಂಡ್ಯ: ಸರ್ಕಾರಿ ಇಲಾಖೆಯಲ್ಲಿನ ಅಧಿಕಾರಿ, ಸಿಬ್ಬಂದಿಯ ಆಟಾಟೋಪಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಡಾ.ಕುಮಾರ ಮುಂದಾಗಿದ್ದಾರೆ. ಇಲಾಖೆಗಳಲ್ಲಿ ಶಿಸ್ತಿನಿಂದ ಇರುವುದರೊಂದಿಗೆ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಕೆಲ ಅಧಿಕಾರಿ, ಸಿಬ್ಬಂದಿ ಸುಖಾಸುಮ್ಮನೆ ಹೊರಗೆ ತಿರುಗಾಡುವುದು ಹಾಗೂ ಟೀ, ಕಾಫಿ ಕುಡಿಯುವ ನೆಪದಲ್ಲಿ ಕಾಲಹರಣ ಮಾಡುವುದು, ಇಷ್ಟ ಬಂದಾಗ ಬರುವುದು, ಹೋಗುವುದು ಎಂಬೆಲ್ಲ ಆರೋಪ ಹಿಂದಿನಿಂದಲೂ ಇದೆ. ಆದರೆ ಇದುವರೆಗೂ ಇಂಥದ್ದಕ್ಕೆ ಕಡಿವಾಣ ಹಾಕುವ ಕೆಲಸವಾಗಿರಲಿಲ್ಲ. ಇದೀಗ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.
ಸಮಯ ಪಾಲನೆ ಕಡ್ಡಾಯ: ಕಚೇರಿಯ ನಿಗದಿತ ಅವಧಿಯಲ್ಲಿ ಸಮಯಪ್ರಜ್ಞೆ ಪಾಲನೆ ಮಾಡುವುದು ಕಡ್ಡಾಯ. ಒಂದು ವೇಳೆ ಉಲ್ಲಂಘಿಸಿದರೆ ಲಿಖಿತ ರೂಪದಲ್ಲಿ ಎಚ್ಚರಿಕೆ ನೀಡುವ ಹೊಣೆಯನ್ನು ಇಲಾಖೆ ಮುಖ್ಯಸ್ಥರಿಗೆ ನೀಡಲಾಗಿದೆ. ಕರ್ತವ್ಯದ ವೇಳೆಯಲ್ಲಿ ಟೀ, ಕಾಫಿಗೆಂದು ಸಿಬ್ಬಂದಿ ವರ್ಗ ಕಚೇರಿಯಿಂದ ಹೊರಗಡೆ ಹೋಗದಂತೆಯೂ ನಿರ್ಬಂಧಿಸಲಾಗಿದೆ. ಪ್ರತಿ ಕಚೇರಿಯಲ್ಲಿಯೂ ಚಲನವಲನ ವಹಿ ನಿರ್ವಹಿಸಿ ಸಿಬ್ಬಂದ ವರ್ಗದ ಮೇಲೆ ನಿಗಾ ವಹಿಸುವಂತೆ ತಿಳಿಸಿದ್ದಾರೆ. ಸೂಚನೆ ಪಾಲನೆ ಮಾಡುವ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿ, ತಹಶೀಲ್ದಾರ್, ಕಚೇರಿ ಸಹಾಯಕರು ಹಾಗೂ ಶಾಖಾ ಮುಖ್ಯಸ್ಥರಿಗೆ ಆದೇಶ ನೀಡಲಾಗಿದೆ.
ಬಯೋಮೆಟ್ರಿಕ್ ಅಳವಡಿಕೆ: ಎಲ್ಲ ಕಚೇರಿಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಅಳವಡಿಸಬೇಕು. ಕಚೇರಿಯ ಮುಖ್ಯಸ್ಥರು ಪ್ರತಿ ವಾರಕ್ಕೊಮ್ಮೆ ಹಾಜರಾತಿ ಪರಿಶೀಲನೆ ಮಾಡಬೇಕಿದೆ. ಶಾಖೆಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಇಲಾಖೆಯಿಂದ ನೀಡಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕು. ಅಂತೆಯೇ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ, ಸಿಬ್ಬಂದಿ ಹೆಸರು, ಪದನಾಮ ಸೂಚಿಸುವ ನಾಮಫಲಕ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ.
![mandya dc orders to all employs for transparent administration in mandya](https://etvbharatimages.akamaized.net/etvbharat/prod-images/29-10-2023/mnd29-govtofficersgedcsuchane_29102023120955_2910f_1698561595_603.jpg)
ಅನಧಿಕೃತ ವಾಹನ ಬಳಕೆಗೆ ತಡೆ: ಕೆಲ ಅಧಿಕಾರಿ, ಸಿಬ್ಬಂದಿ ಸರ್ಕಾರಿ ಕೆಲಸಕ್ಕೆಂದು ನೀಡಿರುವ ವಾಹನವನ್ನು ಅನಧಿಕೃತವಾಗಿ ಬಳಸುವ ಆರೋಪಗಳಿವೆ. ಅಂದರೆ ಕಚೇರಿ ಅವಧಿಯನ್ನು ಮೀರಿ ಬಳಕೆ ಮಾಡುತ್ತಿರುತ್ತಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅದಕ್ಕೂ ಈಗ ಕಡಿವಾಣ ಬೀಳಲಿದೆ. ಇದರ ಬಗ್ಗೆಯೂ ಡಿಸಿ ಸೂಚನೆ ನೀಡಿದ್ದಾರೆ. ಅದರಂತೆ ಸರ್ಕಾರದ ಕೆಲಸಕ್ಕಾಗಿ ಒದಗಿಸಲಾಗಿರುವ ವಾಹನ ಹಾಗೂ ಹೊರಗುತ್ತಿಗೆ ಆಧಾರದ ವಾಹನ ಸೌಲಭ್ಯವನ್ನು ಪಡೆದುಕೊಂಡಿರುವ ಪ್ರತಿ ಕಚೇರಿಯಲ್ಲಿಯೂ ಕರ್ತವ್ಯ ಮುಗಿದ ಬಳಿಕ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿಯೇ ವಾಹನ ನಿಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಮಾತ್ರವಲ್ಲದೆ ಹೊರಗುತ್ತಿಗೆ ಆಧಾರದ ವಾಹನ ಸೌಲಭ್ಯ ಪಡೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ ಆ ವಾಹನದ ಮೇಲೆ ಅಧಿಕಾರಿಯ ಪದನಾಮ ಮತ್ತು ಸರ್ಕಾರದ ಉದ್ದೇಶಕ್ಕೆ ಎಂಬ ನಾಮಫಲಕವನ್ನು ಅಳವಡಿಸುವಂತೆ ಸೂಚಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಪ್ರತಿದಿನ ಬೆಂಗಳೂರು, ಮೈಸೂರಿಗೆ ಅಪ್ ಆ್ಯಂಡ್ ಡೌನ್ ಮಾಡುವ ಅಧಿಕಾರಿ ವರ್ಗವಿದೆ. ಈ ಸಂಬಂಧ ಕಚೇರಿಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ವಾಸವಿರುವಂತೆ ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ನಾಯಕತ್ವದಲ್ಲಿ ಸರ್ಕಾರ ಸ್ಥಿರವಾಗಿದೆ, ಸಿಎಂ ಬದಲಾವಣೆ ಇಲ್ಲ: ಆರ್.ವಿ.ದೇಶಪಾಂಡೆ