ಮೈಸೂರು : ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದ್ರು.
ಗೌನ್ ಹೌಸ್ ವೃತ್ತದ ಬಳಿ ಜಮಾಯಿಸಿದ ಅಂಗಡಿವಾಡಿ ಕಾರ್ಯಕರ್ತೆಯರು, ಅಂಗನವಾಡಿಯ ವೇಳಾಪಟ್ಟಿಯಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು, ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿ ಒದಗಿಸಬೇಕು, ಜೊತೆಗೆ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಐಸಿಡಿಎಸ್ ಯೋಜನೆಯಡಿ 6 ಉದ್ದೇಶಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರರಿಂದ ಮಾಡಿಸಬಾರದು, ನಿವೃತ್ತರಾದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿಯಾದವರಿಗೆ ಕನಿಷ್ಠ 6ಸಾವಿರ ರೂ. ಪಿಂಚಣಿ ನೀಡಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟರು.