ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡು ಹುದ್ದೆ ನಿರೀಕ್ಷೆಯಲ್ಲಿದ್ದ ಬಿ.ಶರತ್ ಅವರನ್ನು ರೇಷ್ಮೆ ಮಾರುಕಟ್ಟೆ ಮಂಡಳಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಕಳೆದ ಒಂದು ತಿಂಗಳ ಹಿಂದೆಯಷ್ಟೆ ಶರತ್ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು. ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ನಿನ್ನೆಯಷ್ಟೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದ ಸರ್ಕಾರ, ಶರತ್ ಅವರಿಗೆ ಯಾವುದೇ ಹುದ್ದೆ ತೋರಿಸಿರಲಿಲ್ಲ. ಹೀಗಾಗಿ, ಐಎಎಸ್ ಅಧಿಕಾರಿ ಶರತ್ ಅವರನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ಸಹ ನಡೆದಿತ್ತು. ಜೊತೆಗೆ ರೋಹಿಣಿ ಸಿಂಧೂರಿ ನೇಮಕಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಸಹ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿದರು. ವಿರೋಧದ ನಡುವೆಯೂ ರೋಹಿಣಿ ಸಿಂಧೂರಿ ಅವರು ಇಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಯಾವುದೇ ಹುದ್ದೆ ತೋರಿಸಿದ ಬಿ.ಶರತ್ ಅವರಿಗೆ ಇದೀಗ ರೇಷ್ಮೆ ಮಾರುಕಟ್ಟೆ ಮಂಡಳಿಗೆ ನೇಮಕ ಮಾಡಲಾಗಿದೆ.