ಮೈಸೂರು: ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಅವರ ಮನೆಗೆ ಕಾಂಗ್ರೆಸ್ ಮುಖಂಡರು ದೌಡಾಯಿಸಿದ್ದಾರೆ.
ವಿಜಯನಗರದಲ್ಲಿರುವ ಸಿ.ಎಚ್.ವಿಜಯಶಂಕರ್ ಮನೆಗೆ ಆಗಮಿಸಿದ ಮಾಜಿ ಸಂಸದ ಆರ್.ಧ್ರುವನಾರಾಯಣ, ಪಕ್ಷದ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್ ಸೇರಿದಂತೆ ಇತರೆ ಮುಖಂಡರು ಚರ್ಚೆ ನಡೆಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಪಡೆದ ವಿಜಯಶಂಕರ್, ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಮತ್ತೆ ಬಿಜೆಪಿಗೆ ಸೇರುವ ಇಂಗಿತ ಹೊಂದಿದ್ದಾರೆ ಎಂದೇ ಹೇಳಲಾಗಿತ್ತು. ಹುಣಸೂರು ವಿಧಾನಸಭಾ ಬೈ ಎಲೆಕ್ಷನ್ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ವಿಜಯಶಂಕರ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.