ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹುಲಿ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಸಿಬ್ಬಂದಿ ಕ್ರಮಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಲ್ಲಹಳ್ಳ ಅರಣ್ಯ ಪ್ರದೇಶದಲ್ಲಿ ಹುಲಿಯ ಉಗುರಿಗಾಗಿ ಹುಲಿಯನ್ನು ಕೊಂದಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು, ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಅರಣ್ಯ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಕ್ಷಣವೇ ಕ್ರಮ ಕೈಗೊಂಡಿರುವುದನ್ನು ಶ್ಲಾಘಿಸಿದ್ದಾರೆ.

ದುಷ್ಕರ್ಮಿಗಳು ಹುಲಿಯನ್ನು ಗುಂಡಿಕ್ಕಿ ಕೊಂದಿದ್ದು, 4 ಕಾಲುಗಳನ್ನು ಕತ್ತರಿಸಿ, 2 ಕೋರೆ ಹಲ್ಲು, ಉಗುರುಗಳನ್ನು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುವ ಯೋಜನೆ ಹಾಕಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಎಲ್ಲ ಐವರು ಆರೋಪಿಗಳನ್ನು ಎಂಟು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇದಕ್ಕೆ ಕೇಂದ್ರ ಸಚಿವರು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.