ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಜಿಲ್ಲೆಯ ತಿ.ನರಸೀಪುರ ತಾಲೂಕಿನ ಗರ್ಗೇಶ್ವರಿ ಗ್ರಾಮದ ಬಳಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಚಿವರ ಬರುವಿಕೆಗೆ ಕಾಯುತ್ತ ಈ ಸ್ಥಳದಲ್ಲಿ ಜಮಾಯಿಸಿದ್ದರು.
ಸಚಿವರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರು ವಶಕ್ಕೆ ಪಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿರೋಧ ಒಡ್ಡಿದರಲ್ಲದೆ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯದಲ್ಲಿ ಬ್ರಿಟಿಷ್ ಸರ್ಕಾರ ಆಡಳಿತದಲ್ಲಿದೆ. ಶಾಂತಿಯುತ ಪ್ರತಿಭಟನೆ ನಡೆಸುವವರನ್ನು ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ? ಪೊಲೀಸ್ ಇಲಾಖೆ ನೈತಿಕ ಗೂಂಡಾಗಿರಿ ನಡೆಸುತ್ತಿದೆ. ಗೃಹ ಇಲಾಖೆ ಬಿಜೆಪಿಯ ಕೈಗೊಂಬೆಯಾಗಿದೆ. ಮುಂದಿನ ದಿನಗಳಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ, ಇದಕ್ಕೆಲ್ಲ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದರು.
ಕಪ್ಪು ಪಟ್ಟಿ ಪ್ರದರ್ಶನ: ಇನ್ನೊಂದೆಡೆ ಪುರಸಭೆ ಮಾಜಿ ಅಧ್ಯಕ್ಷ ಸೋಮು ಮತ್ತು ಬೆಂಬಲಿಗರು ಕೊಳ್ಳೇಗಾಲ ಮುಖ್ಯರಸ್ತೆ ಸಮೀಪವಿರುವ ಕಾಂಗ್ರೆಸ್ ಕಚೇರಿ ಬಳಿ ಸಚಿವ ಸೋಮಶೇಖರ್ ಕಾರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಉಂಟಾದ ಮಳೆ ಹಾನಿ ಕುರಿತು ಪರಿಶೀಲಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಯನ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಗೋಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಸಂಪತ್ ಎಂಬ ವ್ಯಕ್ತಿ ಸಿದ್ದರಾಮಯ್ಯ ಅವರಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಮೊಟ್ಟೆ ಎಸೆದಿರುವ ಸಂಪತ್ ಕುರಿತಂತೆ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.
ಮೊಟ್ಟೆ ಎಸೆತ ಪ್ರಕರಣ ಖಂಡಿಸಿ ಕಾಂಗ್ರೆಸ್ ಇದೇ ತಿಂಗಳ 26 ರಂದು ಕೊಡಗು ಚಲೋ ಪ್ರತಿಭಟನೆ ಸಹ ಹಮ್ಮಿಕೊಂಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಕೊಡಗಿನಲ್ಲಿ ಅಶಾಂತಿಯ ವಾತಾವರಣ