ಮೈಸೂರು: ಶ್ರೀರಾಮ ಮಂದಿರ ನಿರ್ಮಾಣಕ್ಕೆ ಯಾರೂ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ, ಪ್ರತಿಯೊಂದು ಪೈಸೆಯೂ ಸಹ ರಾಮ ಮಂದಿರ ನಿರ್ಮಾಣಕ್ಕೆ ಉಪಯೋಗವಾಗಲಿದ್ದು ಎಲ್ಲದಕ್ಕೂ ಲೆಕ್ಕ ಇಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಇಂದು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಸಚಿವರು, ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಸಚಿವರು, ಸರ್ಕಾರ ಸುಗಮವಾಗಿ, ದಕ್ಷವಾಗಿ ಹೋಗುತ್ತಿದೆ. ಮಾತನಾಡಲು ಏನೂ ಉಳಿದಿಲ್ಲವಾದ್ದರಿಂದ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇವರು ಬಾಯಿ ಚಪಲಕ್ಕೆ ಲೆಕ್ಕ ಕೇಳುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ಯಾರೂ ಸಹ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಪ್ರತಿಯೊಂದು ಪೈಸೆಯೂ ಸಹ ರಾಮಮಂದಿರಕ್ಕೆ ಉಪಯೋಗವಾಗಲಿದೆ ಹಾಗೂ ಎಲ್ಲದಕ್ಕೂ ಲೆಕ್ಕ ಇಡಲಾಗಿದೆ. ದೇಣಿಗೆ ಸಂಗ್ರಹಿಸಿದ ಮನೆಯ ಸಂಖ್ಯೆ, ಸಹಿ ಪಡೆದು ಪ್ಯಾನ್ ಸಂಖ್ಯೆಯನ್ನು ನಮೂದಿಸಲಾಗುತ್ತಿದೆ. ಜೊತೆಗೆ ರಶೀದಿಯನ್ನು ಸಹ ಕೊಡಲಾಗುತ್ತಿದೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ದೇಣಿಗೆಯನ್ನು ಜನರು ಸ್ವಯಂಪ್ರೇರಿತರಾಗಿ ಕೊಡುತ್ತಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿರೋಧ ಪಕ್ಷದವರು ಹೇಳಿದಂತೆ ಶ್ರೀರಾಮಮಂದಿರಕ್ಕೆ ನೀಡಿದ ದೇಣಿಗೆಯ ಹಣ ದುರುಪಯೋಗವಾಗಿಲ್ಲ. ಖಂಡಿತವಾಗಿಯೂ ದೇಣಿಗೆಯ ಲೆಕ್ಕ ಸಿಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.