ಮೈಸೂರು: ಕೆ.ಆರ್.ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವಂತೆ ನಗರ ಪಾಲಿಕೆ ಆಯುಕ್ತರಿಗೆ ಹಲವಾರು ಬಾರಿ ಪತ್ರ ಬರೆದರು, ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರ ಕಚೇರಿಯ ಮುಂದೆ ಹಸುಗಳನ್ನು ಕಟ್ಟಿಕೊಂಡು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೆ.ಆರ್.ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಯುಕ್ತರಿಗೆ ಹಲವಾರು ಬಾರಿ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಖಾಲಿ ನಿವೇಶನದಲ್ಲಿ ಗಿಡಗಳು ಬೆಳೆದು ನಿಂತಿದ್ದು, ಇದಕ್ಕೆ ಗ್ಲೋಬಲ್ ಟೆಂಡರ್ ಕರೆದು ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.
ಖಾತೆ ಬದಲಾವಣೆ, ಹೊಸ ಖಾತೆ, ನಕ್ಷೆ ಅನುಮೋದನೆ, ಕಂದಾಯ ಪಾವತಿಗಳನ್ನ ಆನ್ ಲೈನ್ ಗೊಳಿಸುವಂತೆ ಮನವಿ ಮಾಡಿದರು. ಆನ್ ಲೈನ್ ವ್ಯವಸ್ಥೆ ಮಾಡದೇ ಇರುವುದರಿಂದ ಭ್ರಷ್ಟಚಾರ ಹೆಚ್ಚಾಗಿದೆ ಎಂದು ಕಿಡಿಕಾರಿದರು. ಬೀದಿ ದೀಪ ಸಮಸ್ಯೆ, ಬೀದಿ ನಾಯಿಗಳ ಹಾವಳಿ, ಸ್ಮಶಾನ ನಿರ್ವಹಣೆ ಮಾಡುವಂತೆ ಈಗಾಗಲೇ ಮನವಿ ಪತ್ರ ಬರೆದಿದ್ದರು ಯಾವುದೇ ಪ್ರತಿಕ್ರಿಯೆ ಬಂದಿಲ್ಲವೆಂದು ದೂರಿದರು.